
ಆಗಸ್ಟ್ 23, ಸೋಮವಾರದಂದು ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಪ್ರಮುಖ ವಿದ್ಯಮಾನಗಳು ಜರುಗಿದ್ದು ಒಂದೆಡೆ ಕ್ರಿಕೆಟ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಪಾಕಿಸ್ತಾನದ ಪ್ರಮುಖ ಆಟಗಾರ ಬಾಬರ್ ಅಜಮ್ ಸ್ಪಿನ್ ಬೌಲರ್ಗಳಿಗೆ ಅತ್ಯುತ್ತಮವಾಗಿ ಬ್ಯಾಟ್ ಬೀಸಬಲ್ಲ ಆಟಗಾರ ಎಂದು ಹೇಳಿಕೆ ನೀಡಿದ್ದರೆ, ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿನಲ್ಲಿ ಕ್ವಾರಂಟೈನ್ ನಿಯಮವನ್ನು ಆರಂಭಿಸಿದ್ದಾರೆ. ಹೀಗೆ ಕ್ರಿಕೆಟ್ ಜಗತ್ತಿನಲ್ಲಿ ಆಗಸ್ಟ್ 23ರ ಸೋಮವಾರದಂದು ಹಲವಾರು ಘಟನೆಗಳು ನಡೆದಿದ್ದು ಅವುಗಳ ಕಿರುನೋಟ ಈ ಕೆಳಕಂಡಂತಿದೆ ನೋಡಿ..
* ಕಳೆದೆರಡು ವರ್ಷಗಳಿಂದ ಸತತವಾಗಿ ಕಳಪೆ ಪ್ರದರ್ಶನವನ್ನು ನೀಡುತ್ತಾ ಬಂದಿರುವ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಟೀಕೆಗಳು ವ್ಯಕ್ತವಾಗುತ್ತಿದ್ದವು. ಕಳೆದ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಜವಾಬ್ದಾರಿಯುತ ಆಟವಾಡಿದ ಬಳಿಕ ಇದೀಗ ತಮ್ಮ ಮೇಲಿನ ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಅಜಿಂಕ್ಯಾ ರಹಾನೆ 'ನಾನು ಮತ್ತು ಚೇತೇಶ್ವರ್ ಪೂಜಾರ ಯಾವುದೇ ಕಾರಣಕ್ಕೂ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ' ಎಂದು ಹೇಳಿಕೆಯನ್ನು ನೀಡುವುದರ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.
* ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೂತನ ಕೋಚ್ ಆಗಿ ಆಯ್ಕೆಯಾಗಿರುವ ಮೈಕ್ ಹೆಸನ್ ಬೆಂಗಳೂರು ತಂಡಕ್ಕೆ ನೂತನವಾಗಿ ಆಯ್ಕೆಯಾಗಿರುವ ಆಟಗಾರರ ಕುರಿತು ಮಾತನಾಡಿದ್ದು ಸಿಂಗಾಪೂರ್ ಮೂಲದ ಆಟಗಾರ ಟಿಮ್ ಡೇವಿಡ್ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಟಿಮ್ ಡೇವಿಡ್ ಸ್ಫೋಟಕ ಆಟವನ್ನು ಆಡಬಲ್ಲ ಆಟಗಾರನಾಗಿದ್ದು ಮಧ್ಯಮ ಕ್ರಮಾಂಕದಲ್ಲಿ ಮಿಂಚಲಿದ್ದಾರೆ, ಹೀಗೆ ತಂಡಕ್ಕೆ ಆಸರೆಯಾಗಬಲ್ಲ ಟಿಮ್ ಡೇವಿಡ್ ಗ್ಲೆನ್ ಮ್ಯಾಕ್ಸ್ವೆಲ್ ಅಥವಾ ಎಬಿ ಡಿವಿಲಿಯರ್ಸ್ ಬದಲು ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳುವಂತಹ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಕೋಚ್ ಮೈಕ್ ಹೆಸನ್ ಹೇಳಿದ್ದಾರೆ.
* ಆಗಸ್ಟ್ 25 ರಿಂದ ಲೀಡ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಕುರಿತು ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಜಯ ಸಾಧಿಸಬೇಕೆಂದರೆ ಸೂಪರ್ ಮ್ಯಾನ್ ಪವರ್ ಬೇಕು ಎಂದು ಹೇಳಿಕೆಯನ್ನು ನೀಡಿದೆ.
* ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತದ ಕ್ರೀಡಾಪಟುಗಳಿಗೆ ಬೆಂಬಲ ನೀಡಿ ಎಂದು ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮನವಿ ಮಾಡಿಕೊಂಡಿದ್ದಾರೆ.
* ಭಾರತ ಮತ್ತು ಇಂಗ್ಲೆಂಡ್ ನಡುವೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಗಾಯಕ್ಕೊಳಗಾಗಿದ್ದ ಇಂಗ್ಲೆಂಡ್ ತಂಡದ ವೇಗಿ ಮಾರ್ಕ್ ವುಡ್ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
* 2002ರಲ್ಲಿ ಭಾರತ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾಗ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಆಗಸ್ಟ್ 23ರಂದು ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಭಾರತದ ಆಟಗಾರರಾದ ಸೌರವ್ ಗಂಗೂಲಿ, ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಮೂವರು ಸಹ ಶತಕವನ್ನು ಸಿಡಿಸಿ ಸಂಭ್ರಮಿಸಿದ್ದರು. ಈ ಪಂದ್ಯಕ್ಕೆ ಇಂದಿಗೆ 19 ವರ್ಷಗಳು ತುಂಬಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈ ಪಂದ್ಯದ ಕುರಿತು ಅಭಿಮಾನಿಗಳು ಮೆಲುಕು ಹಾಕಿದ್ದಾರೆ.
* ಯುಎಇಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ಜೋಶ್ ಹೇಜಲ್ ವುಡ್ ಭಾಗವಹಿಸುವುದು ಅನುಮಾನ ಎನ್ನಲಾಗುತ್ತಿತ್ತು. ಆದರೆ ಇದೀಗ ಈ ಕುರಿತು ಅಧಿಕೃತವಾಗಿ ಸ್ಪಷ್ಟನೆ ನೀಡಿರುವ ಹೇಜಲ್ ವುಡ್ ಮುಂದುವರಿಯಲಿರುವ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಭಾಗವಹಿಸುವುದಾಗಿ ಹೇಳಿಕೆ ನೀಡಿದ್ದಾರೆ.