ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆರಂಭಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜನವರಿ 12 ರೊಳಗೆ ಚಾಂಪಿಯನ್ಸ್ ಟ್ರೋಫಿಗೆ ತಾತ್ಕಾಲಿಕ ತಂಡಗಳನ್ನು ಘೋಷಣೆ ಮಾಡಲು ಐಸಿಸಿ ಗಡುವು ನೀಡಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಆಯ್ಕೆ ಸಮಿತಿ ಶನಿವಾರ ಸಭೆ ನಡೆಸಲಿದೆ. ಈ ವೇಳೆ ಟೀಮ್ ಇಂಡಿಯಾವನ್ನು ಪ್ರಕಟಿಸುವ ಸಾಧ್ಯೆತೆಯಿದೆ. ಆದರೆ, ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ಸಾಕಷ್ಟು ಕಸರತ್ತು ನಡೆಯುತ್ತಿದೆ. ಟೀಮ್ ಇಂಡಿಯಾ ಹೆಡ್ಕೋಚ್ ಗೌತಮ್ ಗಂಭೀರ್ ಕೆಲವು ಆಟಗಾರರ ಮೇಲೆ ತಮ್ಮ ಕೃಪೆ ತೋರಿಸುವ ಸಾಧ್ಯತೆಯಿದೆ.
ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ಆಡುವ ಹನ್ನೊಂದರ ಆಯ್ಕೆ ಸುಲಭದ ಮಾತಲ್ಲ. ಈ ಅವಧಿಯಲ್ಲಿ ಕೋಚ್ ಗೌತಮ್ ಗಂಭೀರ್ ಮತ್ತು ಬಿಸಿಸಿಐ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಚಾಂಪಿಯನ್ಸ್ ಟ್ರೋಫಿ 2025 ಟೂರ್ನಿಯಲ್ಲಿ ಭಾರತದ ಆಡುವ ಹನ್ನೊಂದರಲ್ಲಿ ಯಾವ ಆಟಗಾರರನ್ನು ಗಂಭೀರ್ ಸೇರಿಸಿಕೊಳ್ಳಬಹುದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಶುಭಮನ್ ಗಿಲ್ ಆರಂಭಿಕರಾಗಬಹುದು. ಆದರೆ, ರೋಹಿತ್ ಶರ್ಮಾಗೆ ನಾಯಕನಾಗಿ ಬಿಸಿಸಿಐ ಅವಕಾಶ ನೀಡುತ್ತದೆಯೇ ಅಥವಾ ಇಲ್ಲವೇ ಎಂಬುದು ಕುತೂಹಲಕಾರಿಯಾಗಿದೆ. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ನೊಂದಿಗೆ ಟೀಮ್ ಇಂಡಿಯಾಕ್ಕೆ ಅದ್ಭುತ ಆರಂಭವನ್ನು ನೀಡಬಹುದು.
ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ವಿರಾಟ್ ಕೊಹ್ಲಿ ಒಮ್ಮೆ ಸಿಡಿದೆದ್ದರೆ, ಎದುರಾಳಿ ಬೌಲರ್ ಯಾರೇ ಇರಲಿ ನರಕ ತೋರಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಏಕದಿನ ವೃತ್ತಿಜೀವನದಲ್ಲಿ 183 ರನ್ ಗಳಿಸಿರುವುದು ಅತ್ಯುತ್ತಮ ಸ್ಕೋರ್ ಆಗಿದೆ. ಇನ್ನು ಶ್ರೇಯಸ್ ಅಯ್ಯರ್ 4ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲ ಗಂಭೀರ್ ಅವಕಾಶ ನೀಡಬಹುದು. ಶ್ರೇಯಸ್ ಅಯ್ಯರ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಗುರಿತಿಸಿಕೊಂಡಿದ್ದಾರೆ.
ಕೆಎಲ್ ರಾಹುಲ್ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆಯಬಹುದು. ಜೊತೆಗೆ ರಾಹುಲ್ ವಿಕೆಟ್ ಕೀಪರ್ ಪಾತ್ರವನ್ನೂ ನಿರ್ವಹಿಸಬಲ್ಲರು. ಇಂತಹ ಪರಿಸ್ಥಿತಿಯಲ್ಲಿ ವಿಕೆಟ್ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರನ್ನು ಆಡುವ ಹನ್ನೊಂದರಿಂದ ಕೈಬಿಡಬಹುದು. 2023ರ ಏಕದಿನ ವಿಶ್ವಕಪ್ನಲ್ಲಿ ಕೆಎಲ್ ರಾಹುಲ್ ವಿಕೆಟ್ಕೀಪರ್-ಬ್ಯಾಟರ್ ಪಾತ್ರವನ್ನು ಅಚ್ಚು-ಕಟ್ಟಾಗಿ ನಿರ್ವಹಿಸಿದ್ದರು. ಹೀಗಾಗಿ ರಾಹುಲ್ ಮೇಲೆ ಗಂಭೀರ್ ಕೃಪೆ ತೋರುವ ಸಾಧ್ಯತೆಯಿದೆ.
ಟೀಮ್ ಇಂಡಿಯಾದಲ್ಲಿ ಆಲ್ರೌಂಡರ್ ಸ್ಥಾನಕ್ಕೆ ಭಾರೀ ಪೈಪೋಟಿಯಿದೆ. ಆದರೆ ಹಾರ್ದಿಕ್ ಪಾಂಡ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಪಾಂಡ್ಯ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಅಲ್ಲದೆ, ಅವರು ವೇಗದ ಬೌಲಿಂಗ್ ಮಾಡಬಲ್ಲರು. ಸ್ಪಿನ್ ಬೌಲರ್ಗಳಾಗಿ ಅಕ್ಸರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಅವರನ್ನು ಪ್ಲೇಯಿಂಗ್ ಇಲೆವೆನ್ನಲ್ಲಿ ಗಂಭೀರ್ ಸೇರಿಸಿಕೊಳ್ಳಬಹುದು.
ಎಡಗೈ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ಅಕ್ಸರ್ ಪಟೇಲ್ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡಲ್ಲೂ ತಂಡಕ್ಕೆ ಕೊಡುಗೆ ನೀಡಬಲ್ಲರು. ಜಡೇಜಾ ಕೂಡ ಸ್ಫೋಟಕ ಬ್ಯಾಟಿಂಗ್ ಮೂಲಕ ಪಂದ್ಯಗಳನ್ನು ಬದಲಾಯಿಸುವುದರಲ್ಲಿ ನಿಪುಣರು. ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ಆಡುವ ಹನ್ನೊಂದರಲ್ಲಿ ಅವಕಾಶ ಪಡೆಯುವುದು ಖಚಿತ ಎನ್ನಲಾಗುತ್ತಿದೆ. ಈ ಮೂವರು ಕೂಡ ಗಂಭೀರ್ ಗಮನ ಸೆಳೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.