ನ್ಯೂಜಿಲೆಂಡ್ ವಿರುದ್ಧದ ಅವಮಾನಕರ ಸೋಲಿನ ಬಳಿಕ ಇದೀಗ ಭಾರತ ತಂಡ ಆಸ್ಟ್ರೇಲಿಯಾವನ್ನು ಎದುರಿಸಬೇಕಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಈ ಟೆಸ್ಟ್ ಸರಣಿ ನವೆಂಬರ್ 22 ರಂದು ಆರಂಭವಾಗಲಿದೆ.
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ದೊಡ್ಡ ಹಿನ್ನಡೆ ಅನುಭವಿಸಿದೆ. ಪರ್ತ್ನಲ್ಲಿ ನಡೆಯಲಿರುವ ಮೊದಲ ಪಂದ್ಯದಿಂದ ನಾಯಕ ರೋಹಿತ್ ಶರ್ಮಾ ಹೊರಗುಳಿಯುವ ಸಾಧ್ಯತೆಯಿದೆ. ನ್ಯೂಜಿಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ಬಳಿಕ ಅವರು ಈ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಬಗ್ಗೆ ಸಂಪೂರ್ಣ ವಿಶ್ವಾಸವಿಲ್ಲ ಎಂದು ರೋಹಿತ್ ಹೇಳಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿದರೆ, ಟೀಮ್ ಇಂಡಿಯಾದ ನಾಯಕ ಯಾರು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಇದಕ್ಕೆ ಟೀಮ್ ಇಂಡಿಯಾದ ಮಾಜಿ ದಿಗ್ಗಜ ಆಟಗಾರ ಸುನೀಲ್ ಗವಾಸ್ಕರ್ ಉತ್ತರ ಕೊಟ್ಟಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡಲು ಸಾಧ್ಯವಾಗದಿದ್ದರೆ, ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಇಡೀ ಸರಣಿಗೆ ನಾಯಕನನ್ನಾಗಿ ಮಾಡಬೇಕು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ರೋಹಿತ್ ಶರ್ಮಾ ಆಸ್ಟ್ರೇಲಿಯಾ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡಲು ಸಾಧ್ಯವಿಲ್ಲ ಎಂದು ನಾನು ಓದಿದ್ದೇನೆ. ಈ ವಿಷಯದಲ್ಲಿ ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಅವರನ್ನು ಇಡೀ ಆಸ್ಟ್ರೇಲಿಯಾ ಪ್ರವಾಸಕ್ಕೆ ನಾಯಕನನ್ನಾಗಿ ಮಾಡಬೇಕು. ಆಸ್ಟ್ರೇಲಿಯಾ ಪ್ರವಾಸದ ವೇಳೆ ರೋಹಿತ್ ತಂಡಕ್ಕೆ ಮರಳಿದಾಗ ಆಟಗಾರನಾಗಿ ಮಾತ್ರ ಸೇರಬೇಕು. ನಾಯಕನಿಗೆ ಮೊದಲ ಟೆಸ್ಟ್ ಪಂದ್ಯವನ್ನು ಆಡುವುದು ಮುಖ್ಯವಾಗಿದೆ. ಅವರು ಗಾಯಗೊಂಡರೆ ಅದು ಬೇರೆ ವಿಷಯ, ಆದರೆ ಅವರು ಲಭ್ಯವಿಲ್ಲದಿದ್ದರೆ ಉಪನಾಯಕನ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ ಎಂದು ಹೇಳಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯೂಟಿಸಿ)ನ ಫೈನಲ್ಗೆ ತಲುಪಲು ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಐದು ಟೆಸ್ಟ್ಗಳಲ್ಲಿ ನಾಲ್ಕರಲ್ಲಿ ಗೆಲ್ಲಬೇಕಾಗಿದೆ. ಈ ಬಗ್ಗೆಯೂ ಮಾತನಾಡಿರುವ ಗವಾಸ್ಕರ್, ಭಾರತ ತಂಡ ಆಸ್ಟ್ರೇಲಿಯಾವನ್ನು 4-0 ಅಂತರದಲ್ಲಿ ಸೋಲಿಸುತ್ತದೆ ಅನಿಸುವುದಿಲ್ಲ. ಅವರು ಹಾಗೆ ಮಾಡಿದರೆ, ನನಗೆ ತುಂಬಾ ಸಂತೋಷವಾಗುತ್ತದೆ, ಆದರೆ 4-0 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದು ಡಬ್ಲ್ಯೂಟಿಸಿ ಫೈನಲ್ ತಲುಪು ಬಗ್ಗೆ ಯೋಚಿಸಬೇಡಿ. ಈಗ ಆಸ್ಟ್ರೇಲಿಯಾದಲ್ಲಿ 1-0, 2-0, 3-1 ಅಂತರದಲ್ಲಿ ಜಯಗಳಿಸುವುದರ ಮೇಲೆ ಮಾತ್ರ ಭಾರತ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.