ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಪಿ ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿತ್ತು0. ಆದರೆ, ಇದಾದ ಬಳಿಕವೂ ಭಾರತ ತಂಡ ಗೆಲುವು ಸಾಧಿಸಲಿಲ್ಲ. ಭಾರತ 5 ಪಂದ್ಯಗಳ ಟೆಸ್ಟ್ ಸರಣಿಯನ್ನು 1-3 ಅಂತರದಿಂದ ಕಳೆದುಕೊಂಡಿತು. ಈ ಸರಣಿ ಮುಗಿದು ಒಂದು ವಾರದ ನಂತರ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಸಂಚಲನ ಮೂಡಿಸುವ ಸಂಗತಿಯೊಂದು ಬೆಳಕಿಗೆ ಬಂದಿದೆ.
ವರದಿಗಳ ಪ್ರಕಾರ, ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ನಂತರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಣೆ ಮಾಡುವ ನಿರ್ಧಾರದಲ್ಲಿದ್ದರು. ಆದರೆ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು. ಹೊರಗಿನ ಕೆಲವರ ಒತ್ತಡಕ್ಕೆ ಮಣಿದು ನಿರ್ಧಾರ ಬದಲಿಸಿದ್ದಾರೆ. ಅಡಿಲೇಡ್ ಮತ್ತು ಬ್ರಿಸ್ಬೇನ್ ಟೆಸ್ಟ್ಗಳಲ್ಲಿ ರೋಹಿತ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ಬಳಿಕ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ತೆರೆದರು. ಇದರ ಹೊರತಾಗಿಯೂ ಅವರ ರನ್ ಗಳಿಸಲಾಗಲಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕೇವಲ 31 ರನ್ ಮತ್ತು ನಾಯಕನಾಗಿ ಕಳೆದ ಏಳು ಟೆಸ್ಟ್ಗಳಲ್ಲಿ ಆರು ಸೋಲುಗಳೊಂದಿಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಮಾಡುವ ಮನಸ್ಸು ಮಾಡಿದ್ದರು. ಆದಾಗ್ಯೂ, ಸಿಡ್ನಿಯಲ್ಲಿ ಹೊಸ ವರ್ಷದ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರ ಮನಸ್ಸು ಬದಲಾಯಿತು. ಇದು ಹೆಡ್ಕೋಚ್ ಗೌತಮ್ ಗಂಭೀರ್ಗೆ ಇಷ್ಟವಾಗಲಿಲ್ಲ. ಇದರಿಂದ ಗಂಭೀರ್ ಬೇಸರಗೊಂಡಿದ್ದಾರೆ. ಇನ್ನೂ ಗಂಭೀರ್ ಮತ್ತು ರೋಹಿತ್ ನಡುವೆ ಎಲ್ಲವೂ ಸರಿಯಾಗಿಲ್ಲ ಎಂದು ವರದಿಗಳು ಹೇಳಿವೆ.
ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಸೋತ ನಂತರ ರೋಹಿತ್ ಶರ್ಮಾ ಏಕದಿನದಲ್ಲಿ ಪುನರಾಗಮನದ ಮೇಲೆ ಕಣ್ಣಿಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ತಂಡದ ನಾಯಕತ್ವ ವಹಿಸಲಿದ್ದಾರೆ. ಇದಾದ ನಂತರ ಅವರು ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಗುರಿ ಹೊಂದಿದ್ದಾರೆ. ಕೆಲವು ಅನುಭವಿ ಟೀಮ್ ಇಂಡಿಯಾ ಆಟಗಾರರಿಗೆ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಕೊನೆಯ ಏಕದಿನ ಪ್ರವಾಸವೂ ಆಗಿರಬಹುದು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಈಗಾಗಲೇ ಟಿ20ಗೆ ನಿವೃತ್ತಿ ಹೊಂದಿದ್ದು, ಈ ಟೂರ್ನಿಯ ನಂತರ ಯಾರು ಆಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.