ಬಹುನಿರೀಕ್ಷಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆರಂಭವಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಎದುರು ಟಾಸ್ ಗೆದ್ದ ಭಾರತ ತಂಡದ ನಾಯಕ ಜಸ್ಪ್ರೀತ್ ಬುಮ್ರಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳ ರೋಚಕ ಟೆಸ್ಟ್ ಪಂದ್ಯ ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಪರ್ತ್ ಟೆಸ್ಟ್ ಪಂದ್ಯಕ್ಕೆ ಭಾರತ ಅಚ್ಚರಿಯ ಆಡುವ ಹನ್ನೊಂದರ ಬಳಗವನ್ನು ಆಯ್ಕೆ ಮಾಡಿಕೊಂಡಿದೆ. ಇದು ಭಾರತೀಯ ಅಭಿಮಾನಿಗಳು ಅಚ್ಚರಿ ತರಿಸಿದೆ.
ಪರ್ತ್ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಅನುಭವಿ ಸ್ಪಿನ್ನರ್ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರನ್ನು ಕೈ ಬಿಟ್ಟಿದೆ. ಅಶ್ವಿನ್ ಮತ್ತು ಜಡೇಜಾ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ಗಳಾಗಿದ್ದು, ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ. ಇದರ ಹೊರತಾಗಿಯೂ ಈ ಇಬ್ಬರು ಸ್ಟಾರ್ ಸ್ಪಿನ್ನರ್ಗಳನ್ನು ಆಡುವ ಹನ್ನೊಂದರ ಬಳಗದಿಂದ ಹೊರಗಿಟ್ಟಿರುವುದು ಏಕೆ ಎಂಬ ಪ್ರಶ್ನೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಕಾಡುತ್ತಿದೆ.

ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಇಬ್ಬರು ಯುವ ಆಟಗಾರರನ್ನು ಕಣಕ್ಕೀಳಿಸಿದೆ. ಐಪಿಎಲ್ನಲ್ಲಿ ಮಿಂಚಿದ ಕೋಲ್ಕತ್ತಾ ನೈಟ್ ರೈಡರ್ಸ್ನ ವೇಗದ ಬೌಲರ್ ಹರ್ಷಿತ್ ರಾಣಾ ಹಾಗೂ ಸನ್ರೈಸರ್ಸ್ ಹೈದರಾಬಾದ್ನ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಹೊರಗಿಟ್ಟಿರುವ ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗಕ್ಕೆ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ನೀಡಿದೆ. ಇದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ತೆಗೆದುಕೊಂಡ ಅಚ್ಚರಿಯ ನಿರ್ಧಾರವಾಗಿದೆ. ವೇಗಿಗಳಾದ ಆಕಾಶ್ ದೀಪ್ ಮತ್ತು ಪ್ರಸಿದ್ಧ್ ಕೃಷ್ಣ ಬದಲಿಗೆ ಹರ್ಷಿತ್ ರಾಣಾ ಅವರನ್ನು ಹನ್ನೊಂದರ ಬಳಗದಲ್ಲಿ ಸೇರಿಸಲಾಗಿದೆ.
ಇತ್ತೀಚೆಗೆ ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಕಳೆದುಕೊಂಡಿತ್ತು. ಈ ಸರಣಿಯಲ್ಲಿ ಅಶ್ವಿನ್ ಮತ್ತು ಜಡೇಜಾ ಹೇಳಿಕೊಳ್ಳುವಂತ ಪ್ರದರ್ಶನ ನೀಡಲಿಲ್ಲ. ಬೌಲಿಂಗ್ನಲ್ಲಿಯೂ ಅವರು ತಮ್ಮ ಸ್ಪಿನ್ನ ಮ್ಯಾಜಿಕ್ ತೋರಿಸುವಲ್ಲಿ ವಿಫಲವಾದರು. ಆದರೆ ವಾಷಿಂಗ್ಟನ್ ಸುಂದರ್ ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡು ಮಿಂಚಿದರು. ಹೀಗಾಗಿ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್ ನಡುವೆ ಪೈಪೋಟಿ ಏರ್ಪಟ್ಟಿದ್ದು , ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಹೆಚ್ಚು ಅನುಭವ ಹೊಂದಿರುವ ಆಟಗಾರರಿಗಿಂತ ಫಾರ್ಮ್ನಲ್ಲಿರುವ ಆಟಗಾರರೊಂದಿಗೆ ಪರ್ತ್ ಟೆಸ್ಟ್ ಪಂದ್ಯವನ್ನಾಡಲು ಬಯಸಿತು ಎಂದು ವರದಿಗಳು ಹೇಳಿವೆ.
ಸುಂದರ್ 2020-21ರ ಬಾರ್ಡರ್ ಗವಾಸ್ಕರ್ ಟ್ರೋಫಿ ಸಮಯದಲ್ಲಿಯೂ ಗಬ್ಬಾ ಟೆಸ್ಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಭಾರತದ ಐತಿಹಾಸಿ ಗೆಲುವಿನಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದರು. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ಆಡಿದ ಎರಡು ಟೆಸ್ಟ್ ಪಂದ್ಯಗಳಲ್ಲಿ 16 ವಿಕೆಟ್ಗಳನ್ನು ಪಡೆದು ಹಲವು ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ಮಾಡಿದ್ದರು.