ಯುಎಇನಲ್ಲಿ ಆಯೋಜಿಸಲಾಗಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿನಲ್ಲಿ ಭಾರತ ಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿತ್ತು. ಆದರೆ ಟೀಮ್ ಇಂಡಿಯಾದಿಂದ ಸಂಘಟಿತ ಪ್ರದರ್ಶನ ಕಂಡು ಬರಲಿಲ್ಲ. ಹೀಗಾಗಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಿಂದ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಲೀಗ್ ಹಂತದಲ್ಲೇ ಹೊರಬಿದ್ದಿದೆ.
ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ನಾಯಕಿ ಹರ್ಮನ್ಪ್ರೀತ್ ಕೌರ್ ಚಾಂಪಿಯನ್ ಆಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ನಾಯಕಿ ಹೇಳಿದಂತೆ ತಂಡ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲಿಲ್ಲ. ಅವಮಾನಕರ ಸೋಲಿನ ನಂತರ ನಾಯಕಿ ಹರ್ಮನ್ಪ್ರೀತ್ ಕೌರ್ ಟೀಕಾಕಾರರ ಗುರಿಯಾಗಿದ್ದಾರೆ. ಇತ್ತೀಚಿಗೆ ಅವರ ನಾಯಕತ್ವದಲ್ಲಿ ಟೀಮ್ ಇಂಡಿಯಾ ಕಳಪೆ ಪ್ರದರ್ಶನ ನೀಡುತ್ತಿದೆ.

ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದ ಬೆನ್ನಲ್ಲೇ ಮಹಿಳಾ ಭಾರತ ತಂಡದ ಮುಖ್ಯ ಕೋಚ್ ಅಮೋಲ್ ಮಜುಂದಾರ್ ಮತ್ತು ಆಯ್ಕೆದಾರರೊಂದಿಗೆ ಮಂಡಳಿಯ ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹರ್ಮನ್ಪ್ರೀತ್ ಕೌರ್ ಅವರ ನಾಯಕತ್ವದ ಬಗ್ಗೆ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.
ಹರ್ಮನ್ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ 2020 ಟಿ20 ವಿಶ್ವಕಪ್ ಫೈನಲ್ ತಲುಪಿತ್ತು. ಆದರೆ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋಲು ಕಂಡಿತ್ತು. ಅಂದಿನಿಂದ ತಂಡದ ಪ್ರದರ್ಶನದಲ್ಲಿ ಕುಸಿತ ಕಂಡುಬಂದಿದೆ. ಬ್ಯಾಟಿಂಗ್ ಕ್ರಮಾಂಕದಲ್ಲಿ ನಿರಂತರ ಬದಲಾವಣೆಗಳು ಮತ್ತು ಮೈದಾನದಲ್ಲಿ ಕೆಲವು ಕಳಪೆ ಪ್ರದರ್ಶನಗಳು ತಂಡದ ಅದೃಷ್ಟವನ್ನು ಹಾಳುಮಾಡಿದೆ. ಬಲಿಷ್ಠ ತಂಡವಾಗಿದ್ದರೂ, ಈ ಟಿ20 ವಿಶ್ವಕಪ್ನ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋತಿತ್ತು. ಆ ಒಂದು ಪಂದ್ಯವು ಸೆಮಿಫೈನಲ್ಗೆ ತಲುಪುವ ಅವಕಾಶಕ್ಕೆ ಹೊಡೆತ ನೀಡಿತು. ಅಂತಿಮವಾಗಿ ಆಸ್ಟ್ರೇಲಿಯಾ ವಿರುದ್ಧದ ಸೋಲು ತಂಡವನ್ನು ಟೂರ್ನಿಯಿಂದ ಹೊರಹಾಕಿತು.
ವರದಿಗಳ ಪ್ರಕಾರ, ಬಿಸಿಸಿಐ, ಹರ್ಮನ್ಪ್ರೀತ್ ಅವರ ನಾಯಕತ್ವದ ಭವಿಷ್ಯದ ಬಗ್ಗೆ ಆಯ್ಕೆ ಸಮಿತಿ ಮತ್ತು ಮುಖ್ಯ ಕೋಚ್ ಅಮೋಲ್ ಮುಜುಂದಾರ್ ಅವರೊಂದಿಗೆ ಚರ್ಚಿಸಲಿದೆ. ಅಕ್ಟೋಬರ್ 24 ರಂದು ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಪಂದ್ಯಕ್ಕೆ ತಂಡವನ್ನು ಆಯ್ಕೆ ಮಾಡುವ ಮೊದಲು ಈ ಸಭೆ ನಡೆಯಲಿದೆ. ಆದರೆ, ಆಟಗಾರ್ತಿಯಾಗಿ ಹರ್ಮನ್ಪ್ರೀತ್ ಭಾರತ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ.
ಮುಂದಿನ 2025ರ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿ ಭಾರತದಲ್ಲಿ ನಡೆಯಲಿದೆ. ಹಿಗಾಗಿ ನ್ಯೂಜಿಲೆಂಡ್ ಸರಣಿಗೂ ಮುನ್ನ ಬಿಸಿಸಿಐ ನಾಯಕತ್ವದಲ್ಲಿ ಬದಲಾವಣೆ ಮಾಡಲಿದೆಯೇ ಅಥವಾ ಇಲ್ಲವೇ ಎಂಬುದು ಕುತೂಹಲ ಮೂಡಿಸಿದೆ. ನಾಯಕತ್ವದಲ್ಲಿ ಬದಲಾವಣೆಯಾದರೆ, ಏಕದಿನ ವಿಶ್ವಕಪ್ಗೆ ತಂಡವನ್ನು ಮುನ್ನಡೆಸಲು ಹೊಸ ನಾಯಕಿಗೆ ಸಾಕಷ್ಟು ಸಮಯ ಸಿಗಲಿದೆ. ಜೊತೆಗೆ ತವರಿನಲ್ಲಿ ಮತ್ತೊಂದು ವಿಶ್ವಕಪ್ ಗೆಲ್ಲುವುದು ತಂಡದ ಮೇಲಿನ ಪ್ರಮುಖ ಜವಾಬ್ದಾರಿಯಾಗಿದೆ.