ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಸರಣಿ ನಡೆಯುತ್ತಿದೆ. ಈ ಸರಣಿಯ ಎರಡು ಪಂದ್ಯಗಳು ಮುಗಿದಿವೆ. ಇತ್ತೀಚಿಗೆ ಆಡಿಲೇಡ್ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅಮೋಘ ಸಂಘಟಿತ ಆಟದ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಸಮಬಲ ಸಾಧಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಈ ಸರಣಿ ಮಹತ್ವ ಪಡೆದಿದೆ.
ಈ ಸರಣಿಯಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ನಾಲ್ಕು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸುವ ಹಾದಿ ಸುಗಮವಾಗುತ್ತದೆ. ಇಲ್ಲದೆ ಇದ್ದಲ್ಲಿ ಬೇರೆ ತಂಡಗಳ ಫಲಿತಾಂಶದ ಮೇಲೆ ಕಾಯಬೇಕು. ಭಾರತ, ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿದ್ದು, ತಂಡಕ್ಕೆ ನುಂಗಲಾರದ ತುತ್ತಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಮುಂದಿನ ಎಲ್ಲ ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.

ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿದ್ದ ವೇಗಿ ಹರ್ಷಿತ್ ರಾಣಾ, ಸ್ಥಿರ ಪ್ರದರ್ಶನವನ್ನು ನೀಡಿದ್ದರು. ಆದರೆ ಆಡಿಲೇಡ್ನಲ್ಲಿ ಇವರು ಬಿಗುವಿನ ದಾಳಿಯನ್ನು ನಡೆಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಇವರ ಸ್ಥಾನದ ಮೇಲೆ ಅಪಾಯದ ತೂಗುಗತ್ತಿ ನೇತಾಡುತ್ತಿದೆ. ಎರಡನೇ ಟೆಸ್ಟ್ನಲ್ಲಿ ರನ್ಗಳನ್ನು ಸರಾಗವಾಗಿ ಬಿಟ್ಟುಕೊಟ್ಟು ಇವರು ಕೈ ಸುಟ್ಟುಕೊಂಡಿದ್ದರು.
ಆಡಿಲೇಡ್ನಲ್ಲಿ ನಡೆದ ಡೇ ಆಂಡ್ ನೈಟ್ ಟೆಸ್ಟ್ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಹರ್ಷಿತ್ ರಾಣಾ, ಅವರ ಬದಲಿಗೆ ತಂಡವನ್ನು ಯಾರು ಸೇರಿಕೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಈಗಾಗಲೇ ಬೆಂಚ್ ಮೇಲೆ ಇಬ್ಬರು ವೇಗಿಗಳು ಕಾಯುತ್ತಿದ್ದಾರೆ. ಇದರಲ್ಲಿ ಒಬ್ಬ ಮಾಜಿ ಆರ್ಸಿಬಿ ವೇಗಿ ಆಕಾಶ್ ದೀಪ್ ಸಹ ಒಬ್ಬರು. ಇವರು ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶದ ವಿರುದ್ಧ ಸ್ಥಿರ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದಾರೆ.

ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಇನ್ನೊಬ್ಬ ವೇಗದ ಬೌಲರ್ ಕರ್ನಾಟಕದ ಪ್ರಸಿದ್ಧ ಕೃಷ್ಣಾ. ತಮ್ಮ ಬಿಗುವಿನ ದಾಳಿಯಿಂದಲೇ ಖ್ಯಾತಿ ಪಡೆದ ಇವರು, ಇತ್ತೀಚಿಗೆ ಗಾಯದಿಂದ ಕಮ್ ಬ್ಯಾಕ್ ಮಾಡಿದ್ದಾರೆ. ಅಲ್ಲದೆ ಆಸ್ಟ್ರೇಲಿಯಾ ವಿರುದ್ಧದ ಅನಧಿಕೃತ ಟೆಸ್ಟ್ನಲ್ಲಿ ಉತ್ತಮ ಬೌಲಿಂಗ್ ದಾಳಿಯನ್ನು ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ. ಇವರು ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯುವ ಕನಸು ಕಾಣುತ್ತಿದ್ದಾರೆ.
ಡಿಸೆಂಬರ್ 14 ರಿಂದ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಪರ ವಾಷಿಂಗ್ಟನ್ ಸುಂದರ್ ಮತ್ತೆ ತಂಡಕ್ಕೆ ಎಂಟ್ರಿ ನೀಡುವ ಸಾಧ್ಯತೆ ಇದೆ. ಅಶ್ವಿನ್ ಆಡಿಲೇಡ್ ಟೆಸ್ಟ್ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರ ಸ್ಥಾನದ ಮೇಲೆ ಅಪಾಯದ ತೂಗುಗತ್ತಿ ನೇತಾಡುತ್ತಿದೆ. ಟೀಮ್ ಇಂಡಿಯಾ ಹರ್ಷಿತ್ ರಾಣಾ ಹಾಗೂ ಅಶ್ವಿನ್ ಅವರಿಗೆ ಕೈ ಬಿಟ್ಟು ಇಬ್ಬರಿಗೆ ಅವಕಾಶ ನೀಡುವ ಸಾಧ್ಯತೆ ದಟ್ಟವಾಗಿದೆ.