ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ನಂತರ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಿದೆ. ಪ್ರವಾಸದ ವೇಳೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ನಡೆಯಲಿದೆ.
ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಲಿಷ್ಠ ಟೀಮ್ ಇಂಡಿಯಾವನ್ನು ಕಳುಹಿಸಲು ಸಜ್ಜಾಗುತ್ತಿದೆ. ಕಳೆದ 10 ವರ್ಷಗಳಿಂದ ಭಾರತ ತಂಡದ ಎದುರು ಕಾಂಗೂರು ಪಡೆ ಟೆಸ್ಟ್ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ. ಅಲ್ಲದೆ ತವರಿನಲ್ಲಿ ಆಸ್ಟ್ರೇಲಿಯಾ ಕಳೆದ ಎರಡು ಬಾರಿಯೂ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದೆ. ಭಾರತ ಹ್ಯಾಟ್ರಿಕ್ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ಬಿಸಿಸಿಐ ತಂಡಕ್ಕೆ ಭರವಸೆಯ ಆಟಗಾರರನ್ನು ಸೇರಿಸಿಕೊಳ್ಳಲು ಹುಡುಕಾಟದಲ್ಲಿ ತೊಡಗಿದೆ.

ಕಳೆದ ಬಾರಿ 2022ರ ಆಸ್ಟ್ರೇಲಿಯಾ ಪ್ರವಾಸದ ವೇಳೆ ಭಾರತ ತಂಡದ ಪರ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅದ್ಭುತ ಪ್ರದರ್ಶನ ನೀಡಿದ್ದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಶಾರ್ದೂಲ್ ಅವರು ಕಾಂಗೂರು ಪಡೆಯನ್ನು ಕಾಡಿದ್ದರು. ಗಬ್ಬಾ ಟೆಸ್ಟ್ ಪಂದ್ಯವನ್ನು ಗೆಲ್ಲುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಈ ಬಾರಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಅವರು ಆಯ್ಕೆ ಆಗುವುದು ಅನುಮಾನವಾಗಿದೆ. ಗಾಯದ ಸಮಸ್ಯೆಯಿಂದ ಶಾರ್ದೂಲ್ ಟೀಮ್ ಇಂಡಿಯಾದಿಂದ ದೂರ ಉಳಿದಿದ್ದಾರೆ.
ಆದರೆ, ಶಾರ್ದೂಲ್ ಗಾಯದಿಂದ ಚೇತರಿಸಿಕೊಂಡಿದ್ದು, ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡುತ್ತಿದ್ದಾರೆ. ಕಳೆದ ಆವೃತ್ತಿ ರಣಜಿ ಟ್ರೋಫಿಯಲ್ಲಿ ಮುಂಬೈ ಚಾಂಪಿಯನ್ ಆಗಲು ಶಾರ್ದೂಲ್ ನಿರ್ಣಾಯಕ ಪಾತ್ರ ವಹಿಸಿದ್ದರು. ಆದರೆ ಈಗ ಟೀಮ್ ಇಂಡಿಯಾ ಮೊದಲಿನಂತಿಲ್ಲ. ಗೌತಮ್ ಗಂಭೀರ್ ಹೆಡ್ಕೋಚ್ ಆದ ನಂತರ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗುತ್ತಿದೆ. ಹೀಗಾಗಿ 33 ವರ್ಷದ ಶಾರ್ದೂಲ್ ಅವರು ಟೆಸ್ಟ್ ಕ್ರಿಕೆಟ್ ಆಡುವ ಸಾಮರ್ಥ್ಯವನ್ನು ಹೊಂದಿದ್ದರೂ, ಟೀಮ್ ಇಂಡಿಯಾಕ್ಕೆ ಮರಳುವುದು ಕಷ್ಟರವಾಗಿದೆ. ಇಂತಹ ಸಂದರ್ಭದಲ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಶಾರ್ದೂಲ್ಗೆ ಬದಲಿ ಆಟಗಾರನಾಗಿ ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಂಡಿದ್ದಾರೆ.
ವರದಿಗಳ ಪ್ರಕಾರ ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸೀಮ್ ಬೌಲಿಂಗ್ ಆಲ್ ರೌಂಡರ್ ಆಗಿ ನೋಡುತ್ತಿದೆ. ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಸಿಕ್ಕಿರುವ ಅವಕಾಶಗಳಲ್ಲಿ ಅದ್ಭುತವಾಗಿ ಆಡಿ ಭರವಸೆ ಉಳಿಸಿಕೊಂಡಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತ ತಂಡದ ಆಲ್ರೌಂಡರ್ ಸ್ಥಾನಕ್ಕೆ ನಿತೀಶ್ ಕುಮಾರ್ ರೆಡ್ಡಿ ಆಯ್ಕೆಯಾಗುವ ರೇಸ್ನಲ್ಲಿದ್ದಾರೆ.
ನಿತೀಶ್ ಕುಮಾರ್ ರೆಡ್ಡಿ ಅವರು ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ನ ಭಾಗವಾಗಿದ್ದಾರೆ. ಐಪಿಎಲ್ನಲ್ಲಿ ಅವರು ನೀಡಿದ ಪ್ರದರ್ಶನದ ಆಧಾರದ ಮೇಲೆ ಭಾರತ ಟಿ20 ತಂಡಕ್ಕೂ ಆಡುವ ಅವಕಾಶ ಸಿಕ್ಕಿದೆ. ಇತ್ತೀಚೆಗೆ ಅವರು ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಭಾರತದ ಪರ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಈಗಾಗಲೇ ಆಸ್ಟ್ರೇಲಿಯಾ ಪ್ರವಾಸಕ್ಕೆ ಬಿಸಿಸಿಐ ಪ್ರಕಟಿಸಿರುವ ಋತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ಎ ತಂಡದಲ್ಲಿ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಪಡೆದಿದ್ದಾರೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಂತರ ಬಿಸಿಸಿಐ ಹಿರಿಯ ತಂಡದ ಆಯ್ಕೆ ಸಮಿತಿಯು ಪುಣೆಯಲ್ಲಿ ಸಭೆ ಸೇರುವ ನಿರೀಕ್ಷೆಯಿದೆ . ನವೆಂಬರ್ 10 ರಂದು ಭಾರತ ತಂಡ ಪರ್ತ್ಗೆ ತೆರಳುವ ಸಾಧ್ಯತೆಯಿದೆ. ಅದಕ್ಕೂ ಮೊದಲು ಅಕ್ಟೋಬರ್ 31 ರಿಂದ ನವೆಂಬರ್ 7 ವರೆಗೆ ಎರಡು ಪ್ರಥಮ ದರ್ಜೆ ಪಂದ್ಯಗಳನ್ನು ಆಸ್ಟ್ರೇಲಿಯಾ ವಿರುದ್ಧ ಭಾರತ ಎ ತಂಡ ಆಡಲಿದೆ. ಈ ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ದಿನಕ್ಕೆ 10-15 ಓವರ್ಗಳ ಬೌಲಿಂಗ್ ಮಾಡಬಹುದೇ ಎಂದು ಬಿಸಿಸಿಐಯ ಆಯ್ಕೆ ಸಮಿತಿ ಎದುರು ನೋಡುತ್ತಿದೆ. ಒಂದು ವೇಳೆ ನಿತೀಶ್ ಕುಮಾರ್ ರೆಡ್ಡಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಬಿಸಿಸಿಐಯ ಆಯ್ಕೆ ಸಮಿತಿ ಗಮನ ಸೆಳೆದರೆ, ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ.