ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ನಂತರ, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈಗ ನ್ಯೂಜಿಲೆಂಡ್ ಅನ್ನು ಎದುರಿಸಲು ಸಜ್ಜಾಗಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮೂರು ಪಂದ್ಯಗಳಲ್ಲಿ ಟೆಸ್ಟ್ ಸರಣಿ ನಡೆಯಲಿದೆ.
ಉಭಯ ತಂಡಗಳ ನಡುವಿನ ಸರಣಿಯ ಮೊದಲ ಪಂದ್ಯ ಬುಧವಾರದಿಂದ (ಅಕ್ಟೋಬರ್ 16) ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಕಳೆದ ವಾರ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿತ್ತು. ಯಶ್ ದಯಾಳ್ ಹೊರತುಪಡಿಸಿ, ಬಾಂಗ್ಲಾದೇಶ ಸರಣಿಗೆ ಆಯ್ಕೆಯಾದ ಇತರ 15 ಸದಸ್ಯರು ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಆಡವ ಹನ್ನೊಂದರ ಬಳಗ ಹೇಗರಲಿದೆ ಎಂಬುದು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹ ಮೂಡಿಸಿದೆ. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟರ್ಗೆ ಆಡುವ ಅವಕಾಶ ಸಿಗುವ ಸಾಧ್ಯತೆಯಿದೆ. ಇತ್ತೀಚೆಗೆ ಲಕ್ನೋದಲ್ಲಿ ನಡೆದ ಇರಾನಿ ಕಪ್ 2024ರ ಟೂರ್ನಿಯಲ್ಲಿ ಮುಂಬೈ ತಂಡ ಚಾಂಪಿಯನ್ ಆಗಿತ್ತು. ಇರಾನಿ ಕಪ್ ಪಂದ್ಯದಲ್ಲಿ ರೆಸ್ಟ್ ಆಫ್ ಇಂಡಿಯಾ ವಿರುದ್ಧ ಮುಂಬೈ ಬ್ಯಾಟರ್ ಸರ್ಫರಾಜ್ ಖಾನ್ ದ್ವಿಶತಕ ಸಿಡಿಸಿ ಮಿಂಚಿದ್ದರು.
ಇದಲ್ಲದೆ, ಈ ವರ್ಷದ ಆರಂಭದಲ್ಲಿ ರಾಜ್ಕೋಟ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಭಾರತ ಪರ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿಯೂ ಸರ್ಫರಾಜ್ ಖಾನ್ ಅಬ್ಬರಿಸಿದ್ದರು. ವಿಕೆಟ್ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ವಾಪಸಾದ ಬಳಿಕ ಅವರು ತಂಡದಿಂದ ಹೊರಗುಳಿಯಬೇಕಾಯಿತು. ಬಾಂಗ್ಲಾದೇಶ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲೂ ಅವರಿಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಇದೀಗ ದ್ವಿಶತಕ ಸಿಡಿಸಿದ ಸರ್ಫರಾಜ್ ಖಾನ್ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್-11ರಲ್ಲಿ ಎಂಟ್ರಿ ಕೊಡುವ ಸಾಧ್ಯತೆಯಿದೆ.
ಕೆಎಲ್ ರಾಹುಲ್ಗೆ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಶ್ರಾಂತಿ ನೀಡುವ ಮೂಲಕ ಸರ್ಫರಾಜ್ ನನ್ನು ರೋಹಿತ್ ಶರ್ಮಾ ಕಣಕ್ಕಿಳಿಸುವ ಸಾಧ್ಯತೆಯಿದೆ. ದೇಶೀಯ ಟೂರ್ನಿಗಳಲ್ಲಿ ಅಬ್ಬರಿಸಿರುವ ಸರ್ಫರಾಜ್ ಖಾನ್, ರಾಹುಲ್ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಹೀಗಾಗಿ ಸರ್ಫರಾಜ್ ಖಾನ್, ರಾಹುಲ್ ಅವರನ್ನು ಹಿಂದಿಕ್ಕಿ ಆಡುವ ಅವಕಾಶ ಪಡೆದರೆ ಅಚ್ಚರಿ ಪಡಬೇಕಿಲ್ಲ.
ಆದರೆ, ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದ ರಾಹುಲ್ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದರು. ಇದರ ಮಧ್ಯೆ ರಾಹುಲ್ಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ತವರಿನ ಮೈದಾನವಾಗಿದೆ. ಹೀಗಾಗಿ ಅವರಿಗೂ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆಗಳು ಹೆಚ್ಚಿವೆ.
ಭಾರತದ ಆಡುವ ಹನ್ನೊಂದರಲ್ಲಿ ಬದಲಾವಣೆಗಳಿಗೆ ಹೆಚ್ಚಿನ ಅವಕಾಶಗಳಿಲ್ಲ. ಆದರೆ ರೋಹಿತ್ ಶರ್ಮಾ ಅವರು ಜಸ್ಪ್ರೀತ್ ಬುಮ್ರಾ ಅಥವಾ ಮೊಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಹೆಚ್ಚುವರಿ ಸ್ಪಿನ್ನರ್ಗೆ ಆಡುವ ಅವಕಾಶ ಸಿಗಬಹುದು. ಬಾಂಗ್ಲಾದೇಶ ವಿರುದ್ಧದ ಎರಡು ಟೆಸ್ಟ್ಗಳ ಸರಣಿಯಲ್ಲಿ ಅಕ್ಸರ್ ಪಟೇಲ್ ಮತ್ತು ಕುಲದೀಪ್ ಯಾದವ್ ಬೆಂಚ್ ಕಾಯಬೇಕಾಗಿತ್ತು. ಕಳೆದ ತಿಂಗಳು ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ಗಳಲ್ಲಿ ಸ್ಪಿನ್ ವಿರುದ್ಧ ಹೆಣಗಾಡಿದ ನ್ಯೂಜಿಲೆಂಡ್ ಆಟಗಾರರನ್ನು ನೋಡಿ ಭಾರತ ಹೆಚ್ಚುವರಿ ಸ್ಪಿನ್ನರ್ಗೆ ಅವಕಾಶ ನೀಡಬಹುದು.