ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್ಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಈಗಾಗಲೇ ಅಂತಿಮ ಹಾಗೂ ಸಂಪೂರ್ಣ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.
ಅಕ್ಟೋಬರ್ 5ರಂದು ಭಾರತದಲ್ಲಿ ಐಸಿಸಿ ಕ್ರಿಕೆಟ್ ಪಂದ್ಯಾವಳಿ ಆರಂಭವಾಗಲಿದ್ದರೆ, ಭಾರತ ತಂಡವು ಅಕ್ಟೋಬರ್ 8ರಂದು ಆಸ್ಟ್ರೇಲಿಯಾ ವಿರುದ್ಧ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.
ಇದೀಗ ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು ಭಾರತದಲ್ಲಿ ನಡೆಯಲಿರುವ ಮುಂಬರುವ 2023ರ ಏಕದಿನ ವಿಶ್ವಕಪ್ಗಾಗಿ ಭಾರತದ ತಮ್ಮ ಅತ್ಯುತ್ತಮ ಆಡುವ 11ರ ಬಳಗವನ್ನು ತಿಳಿಸಿದ್ದಾರೆ.

ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಎರಡು ಆರಂಭಿಕ ಸ್ಥಾನಗಳನ್ನು ಪಡೆದುಕೊಳ್ಳುವುದರ ಜೊತೆಗೆ ಮೂರನೇ ಆರಂಭಿಕ ಆಯ್ಕೆಯಾಗಿ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲು 45 ವರ್ಷದ ಮಾಜಿ ಆರಂಭಿಕ ಬ್ಯಾಟರ್ ಆಕಾಶ್ ಚೋಪ್ರಾ ಸಲಹೆ ನೀಡಿದ್ದಾರೆ.
ಕಳೆದ ಡಿಸೆಂಬರ್ 30ರಂದು ಭೀಕರ ಕಾರು ಅಪಘಾತದ ಗಾಯಗಳಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರು ಆಯ್ಕೆಗಾಗಿ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ.
ಆದ್ದರಿಂದ, ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡಕ್ಕೆ ಇತರ ವಿಕೆಟ್ ಕೀಪಿಂಗ್ ಆಯ್ಕೆಗಳು ಬೇಕಾಗುತ್ತವೆ. ಇದು ಇಶಾನ್ ಕಿಶನ್ ಅವರ ಆಯ್ಕೆಯ ಹಾದಿಯನ್ನು ಸುಗಮಗೊಳಿಸುತ್ತದೆ.
"ಇದು ತುಂಬಾ ಸರಳವಾಗಿದೆ. ಶುಭ್ಮನ್ ಗಿಲ್ ಜೊತೆ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ನಂತರದ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಇದ್ದಾರೆ. ರಿಷಭ್ ಪಂತ್ ಇಲ್ಲದ ಕಾರಣ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ ಮುಂದಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ".
"ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನಿಸ್ಸಂದೇಹವಾಗಿ 7ನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ನಾನು ಈ ಸಮಯದಲ್ಲಿ ಇಶಾನ್ ಕಿಶನ್ ಅವರನ್ನು ಮಧ್ಯಮ ಕ್ರಮಾಂಕದ ಆಯ್ಕೆಯಾಗಿ ನೋಡುತ್ತಿಲ್ಲ. ಅವರು ಕೀಪರ್-ಬ್ಯಾಟರ್ ಆಗಿ ಮೂರನೇ ಆರಂಭಿಕ ಆಯ್ಕೆಯಾಗಿರಬೇಕು".
"ಭಾರತ ತಂಡಕ್ಕೆ ಎಡಗೈ ಆಟಗಾರನ ಅಗತ್ಯವಿದೆ ಮತ್ತು ಇಶಾನ್ ಕಿಶನ್ ಅಗ್ರ ಕ್ರಮಾಂಕದಲ್ಲಿ ಏಕದಿನ ದ್ವಿಶತಕವನ್ನು ಸಹ ಬಾರಿಸಿದ್ದಾರೆ," ಎಂದು ಆಕಾಶ್ ಚೋಪ್ರಾ ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಹೇಳಿದ್ದಾರೆ.

ಇನ್ನು ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡಿದ ಮಾಜಿ ಕ್ರಿಕೆಟಿಗ, ಮಣಿಕಟ್ಟಿನ ಸ್ಪಿನ್ನರ್ ಕುಲದೀಪ್ ಯಾದವ್ ಜೊತೆಗೆ ಯುಜ್ವೇಂದ್ರ ಚಹಾಲ್ ಕೂಡ ಇರಬೇಕು ಎಂದು ಹೇಳಿದರು.
"ಬೌಲಿಂಗ್ನಲ್ಲಿ ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ನಂತರ ನಾನು ಯುಜ್ವೇಂದ್ರ ಚಹಾಲ್ನತ್ತ ನೋಡುತ್ತೇನೆ. ಕುಲದೀಪ್ ಯಾದವ್ ಬಗ್ಗೆಯೂ ಯೋಚಿಸುತ್ತೇನೆ. ನಾನು ಈಗ ನನ್ನ ತಂಡವನ್ನು ಅಂತಿಮಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ನಾವು ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವರ ಫಿಟ್ನೆಸ್ಗಾಗಿ ಕಾಯಬೇಕಾಗಿದೆ," ಎಂದರು.
ಜಸ್ಪ್ರೀತ್ ಬುಮ್ರಾ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳುವ ಸುಳಿವು
ಇದೇ ವೇಳೆ ಮುಂಬರುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಪುನರಾಗಮನ ಮಾಡುವ ನಿರೀಕ್ಷೆಯಿದೆ.
ಮಂಗಳವಾರ, ಜುಲೈ 18ರಂದು ಎನ್ಸಿಎನಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು 29 ವರ್ಷದ ಜಸ್ಪ್ರೀತ್ ಬುಮ್ರಾ ಮಾಡಿದ್ದಾರೆ. ವಿಡಿಯೋದಲ್ಲಿ ಬುಮ್ರಾ ಅವರು ಕಠಿಣ ತರಬೇತಿ ಮತ್ತು ಮುಂದಿನ ಪಂದ್ಯಕ್ಕೆ ಸಿದ್ಧರಾಗಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಜಸ್ಪ್ರೀತ್ ಬುಮ್ರಾ ಅವರು ಆಸ್ಟ್ರೇಲಿಯಾ ವಿರುದ್ಧ ಕೊನೆಯ ಬಾರಿಗೆ ಟಿ20 ಪಂದ್ಯ ಆಡಿದ ಸೆಪ್ಟೆಂಬರ್ 2022ರಿಂದ ಭಾರತ ತಂಡದಿಂದ ಹೊರಗುಳಿದಿದ್ದಾರೆ. ಮಾರಕ ವೇಗಿ ಶೀಘ್ರದಲ್ಲೇ ಮೈದಾನಕ್ಕೆ ಮರಳುತ್ತಾರೆ ಮತ್ತು ಏಕದಿನ ವಿಶ್ವಕಪ್ಗೆ ಸಿದ್ಧರಾಗುತ್ತಾರೆ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಶಯ ವ್ಯಕ್ತಪಡಿಸಿದ್ದಾರೆ.