ಭಾರತದಲ್ಲಿ ನಡೆಯುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ 13ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ಅಕ್ಟೋಬರ್ 5ರಂದು ಅಧಿಕೃತ ಚಾಲನೆ ಸಿಗಲಿದೆ.
ವಿಶ್ವಕಪ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ 2019ರ ಫೈನಲಿಸ್ಟ್ಗಳಾದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೆಣಸಾಡಲಿವೆ. ಇದೇ ಸ್ಥಳದಲ್ಲಿ ನವೆಂಬರ್ 19ರಂದು ಫೈನಲ್ ಪಂದ್ಯ ಕೂಡ ನಡೆಯಲಿದೆ.

ಇನ್ನು 2023ರ ಏಕದಿನ ವಿಶ್ವಕಪ್ಗೆ ಅಂತಿಮ ತಂಡಗಳನ್ನು ಐಸಿಸಿಗೆ ಸಲ್ಲಿಸಲು ಇಂದು (ಗುರುವಾರ, ಸೆಪ್ಟೆಂಬರ್ 28) ಕೊನೆಯ ದಿನವಾಗಿದ್ದು, ಕೊನೆಯ ಕ್ಷಣದಲ್ಲಿ ಭಾರತ ತಂಡವು ಒಂದು ಮಹತ್ವದ ಬದಲಾವಣೆಗೆ ಕೈ ಹಾಕಿದೆ.
ಎಡಗೈ ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಅವರು ತಮ್ಮ ಗಾಯದಿಂದ ಚೇತರಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುವ ಸಾಧ್ಯತೆಯಿರುವುದರಿಂದ, 2023ರ ವಿಶ್ವಕಪ್ಗೆ ಭಾರತೀಯ ಕ್ರಿಕೆಟ್ ತಂಡದಲ್ಲಿ ಬದಲಾವಣೆ ಮಾಡಿದೆ.
ಗಮನಾರ್ಹವಾಗಿ, 2023ರ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶ ವಿರುದ್ಧದ ಸೂಪರ್ 4 ಪಂದ್ಯದ ಸಮಯದಲ್ಲಿ ಅಕ್ಷರ್ ಪಟೇಲ್ ಎಡ ಭುಜದ ಗಾಯ ಅನುಭವಿಸಿದರು ಮತ್ತು ಅಂದಿನಿಂದ ತಂಡದಿಂದ ಹೊರಗುಳಿದಿದ್ದಾರೆ.

ಇದೀಗ ಅಕ್ಷರ್ ಪಟೇಲ್ ಬದಲಿಗೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಇತ್ತೀಚಿನ ಸರಣಿಯಲ್ಲಿ 18 ತಿಂಗಳ ನಂತರ ಏಕದಿನ ಭಾರತ ತಂಡಕ್ಕೆ ಮರಳಿದರು ಮತ್ತು ಎರಡನೇ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್ಗಳೊಂದಿಗೆ ಮಿಂಚಿದರು.
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.