ಭಾರತದಲ್ಲಿ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗಾಗಿ ದಿನಗಣನೆ ಆರಂಭವಾಗಿದೆ. ಈಗಾಗಲೇ ಮಂಗಳವಾರ, ಜೂನ್ 27ರಂದು ಅಂತಿಮ ಹಾಗೂ ಸಂಪೂರ್ಣ ವೇಳಾಪಟ್ಟಿಯೂ ಬಿಡುಗಡೆಗೊಂಡಿದೆ.
ವೇಳಾಪಟ್ಟಿ ಪ್ರಕಾರ, ಅಕ್ಟೋಬರ್ 5ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಕಳೆದ ಬಾರಿಯ ರನ್ನರ್-ಅಪ್ ನ್ಯೂಜಿಲೆಂಡ್ ತಂಡವನ್ನು ಎದುರಿಸುವುದರೊಂದಿಗೆ ವಿಶ್ವಕಪ್ ಪಂದ್ಯಾವಳಿಗೆ ಚಾಲನೆ ಸಿಗಲಿದೆ.

ಇನ್ನು ಆತಿಥೇಯ ಭಾರತ ತಂಡ ಅಕ್ಟೋಬರ್ 8ರಂದು ಚೆನ್ನೈನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡುವುದರೊಂದಿಗೆ ತನ್ನ ಅಭಿಯಾನ ಆರಂಭಿಸಲಿದ್ದು, ಅಕ್ಟೋಬರ್ 15ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಹೈ-ವೋಲ್ಟೇಜ್ ಪಂದ್ಯವನ್ನು ಅಹಮದಾಬಾದ್ನಲ್ಲಿ ಆಡಲಿದೆ.
ಇದೀಗ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿ ಗಮನದಲ್ಲಿಟ್ಟುಕೊಂಡು ಭಾರತ ತಂಡವನ್ನು ಕಟ್ಟಬೇಕಿದೆ. ದಶಕದ ನಂತರ ಐಸಿಸಿ ಟ್ರೋಫಿ ಬರವನ್ನು ಕೊನೆಗೊಳಿಸಲು ಬಲಿಷ್ಠ ತಂಡವನ್ನು ಆಯ್ಕೆ ಮಾಡಬೇಕಿದೆ. ನಿರೀಕ್ಷಿತವಾಗಿ ರೋಹಿತ್ ಶರ್ಮಾ ವಿಶ್ವಕಪ್ನಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
2023ರ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡದ ಸಂಭಾವ್ಯ ಆಡುವ 11ರ ಬಳಗದಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬುದನ್ನು ಗಮನಿಸೋಣ.
ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಇನ್ನಿಂಗ್ಸ್ ತೆರೆಯಲು ಸೂಕ್ತರಾಗಿದ್ದಾರೆ. ಇಶಾನ್ ಕಿಶನ್, ರುತುರಾಜ್ ಮತ್ತು ಯಶಸ್ವಿ ಜೈಸ್ವಾಲ್ರನ್ನು ಬ್ಯಾಕಪ್ ಆಗಿ ಪರಿಗಣಿಸಬಹುದು.
ಇನ್ನು ಮೂರನೇ ಕ್ರಮಾಂಕದಲ್ಲಿ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಇದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಐದನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬೇಕು.

ಆರನೇ ಕ್ರಮಾಂಕದಲ್ಲಿ ನಿರೀಕ್ಷಿತ ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಬ್ಯಾಟಿಂಗ್ಗೆ ಇಳಿದರೆ ಸೂಕ್ತ ಮತ್ತು ಏಳನೇ ಕ್ರಮಾಂಕದಲ್ಲಿ ಆಲ್ರೌಂಡರ್ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಬೇಕು.
ನಂತರದ ಸ್ಥಾನದಲ್ಲಿ ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಬಹುದಾಗಿದೆ.
ಜಸ್ಪ್ರೀತ್ ಬುಮ್ರಾ ಮತ್ತು ಶ್ರೇಯಸ್ ಅಯ್ಯರ್ ಎನ್ಸಿಯನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಇಬ್ಬರೂ 2023ರ ಐಸಿಸಿ ಏಕದಿನ ವಿಶ್ವಕಪ್ಗೆ ಮೊದಲು ಭಾರತ ತಂಡಕ್ಕೆ ಮರಳುವ ನಿರೀಕ್ಷೆಯಿದೆ.
ಜಸ್ಪ್ರೀತ್ ಬುಮ್ರಾ ಅವರು ಐರ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲು ಆಗಸ್ಟ್ ತಿಂಗಳಿನಲ್ಲಿ ಹಿಂತಿರುಗುವ ನಿರೀಕ್ಷೆಯಿದ್ದರೆ, ಶ್ರೇಯಸ್ ಅಯ್ಯರ್ ಏಷ್ಯಾ ಕಪ್ 2023ರ ಹೊತ್ತಿಗೆ ಫಿಟ್ ಆಗುವ ಸಾಧ್ಯತೆ ಇದೆ.
ಇನ್ನು ರಿಷಭ್ ಪಂತ್ ಅವರ ಮೇಲೆ ಬಿಸಿಸಿಐ ಸೂಕ್ಷ್ಮವಾಗಿ ಕಣ್ಣಿಟ್ಟಿದೆ. ಆದರೆ ಎಡಗೈ ಬ್ಯಾಟರ್-ವಿಕೆಟ್ ಕೀಪರ್ ಪೂರ್ಣ ಫಿಟ್ನೆಸ್ ಮರಳಿ ಪಡೆಯಲು ಹೆಚ್ಚು ಸಮಯ ಬೇಕಾಗುತ್ತದೆ. ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಭಾರತ ತಂಡಕ್ಕೆ ಮರಳಿದ್ದಾರೆ. ವಿಶ್ವಕಪ್ನಲ್ಲಿ ಭಾರತ ತಂಡದ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗುವ ನಿರೀಕ್ಷೆಯಿದೆ.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಬ್ಯಾಕಪ್ ಆಟಗಾರರು: ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ರಿಷಭ್ ಪಂತ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.