ಭಾನುವಾರ, ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ನ ಐದನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಇಲ್ಲಿಂದ ತಮ್ಮ ವಿಶ್ವಕಪ್ ಅಭಿಯಾನ ಆರಂಭಿಸಲಿವೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ.
ಇದೇ ವೇಳೆ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಬಲಗೈ ಆರಂಭಿಕ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದಾರೆ.

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶುಭ್ಮನ್ ಗಿಲ್ ಸದ್ಯ ಇನ್ನೂ ಚೇತರಿಕೆಯ ಹಂತದಲ್ಲಿದ್ದು, ಹೀಗಾಗಿ ಭಾರತದ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಕುರಿತು ಟಾಸ್ ನಂತರ ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.
"ಅಭ್ಯಾಸ ಪಂದ್ಯಗಳಿಗೆ ಮೊದಲು ನಾವು ಎರಡು ಉತ್ತಮ ಸರಣಿಗಳನ್ನು ಆಡಿದ್ದೇವೆ. ನಾವು ಎಲ್ಲಾ ವಿಭಾಗಗಳಲ್ಲಿ ಉತ್ತಮ ತಯಾರಿ ನಡೆಸಿದ್ದೇವೆ. ದುರದೃಷ್ಟವಶಾತ್ ಶುಭ್ಮನ್ ಗಿಲ್ ಈ ಸಮಯಕ್ಕೆ ಚೇತರಿಸಿಕೊಳ್ಳಲಿಲ್ಲ, ನಾವು ಇಂದು ಬೆಳಿಗ್ಗೆ ತನಕ ಕಾಯುತ್ತಿದ್ದೆವು ಮತ್ತು ಅವರು ಚೇತರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಆಡಲಿದ್ದು, ನನ್ನೊಂದಿಗೆ ಬ್ಯಾಟಿಂಗ್ ತೆರೆಯಲಿದ್ದಾರೆ," ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಿಳಿಸಿದರು.
ಮುನ್ನ ಎರಡೂ ಅಭ್ಯಾಸ ಪಂದ್ಯಗಳು ಮಳೆಯಿಂದಾಗಿ ರದ್ದುಗೊಂಡ ನಂತರ, ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಮಳೆ ಮುಕ್ತ ವಿಶ್ವಕಪ್ ಅಭಿಯಾನವನ್ನು ಆರಂಭಿಸುತ್ತಿದೆ. ಅಕ್ಯುವೆದರ್ ಪ್ರಕಾರ, ಭಾನುವಾರದಂದು ಚೆನ್ನೈನಲ್ಲಿ ಮಳೆಯಾಗುವ ಸಾಧ್ಯತೆಯಿಲ್ಲ.
ಇನ್ನು ವಿಶ್ವದ ಎರಡು ಬಲಾಢ್ಯ ಕ್ರಿಕೆಟ್ ತಂಡಗಳ ನಡುವಿನ 150ನೇ ಏಕದಿನ ಪಂದ್ಯವಾಗಿದೆ. ಆಸ್ಟ್ರೇಲಿಯಾ ತಂಡ ಈವರೆಗೆ ಒಟ್ಟು ಐದು (1987, 1999, 2003, 2007, 2015) ಏಕದಿನ ವಿಶ್ವಕಪ್ ಟ್ರೋಫಿಗಳನ್ನು ಗೆದ್ದಿದೆ. ಇದೇ ವೇಳೆ ಭಾರತ ತಂಡವು 1983 ಮತ್ತು 2011ರಲ್ಲಿ ವಿಶ್ವಕಪ್ ಪ್ರಶಸ್ತಿ ಎತ್ತಿಹಿಡಿದಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹೇಝಲ್ವುಡ್.