ಸತತ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಟೀಮ್ ಇಂಡಿಯಾಗೆ ದೊಡ್ಡ ಆಘಾತ ಉಂಟಾಗಿದೆ. ಗಾಯದಿಂದ ಅಲಭ್ಯವಾಗಿದ್ದ ಹಾರ್ದಿಕ್ ಪಾಂಡ್ಯ ಸಂಪೂರ್ಣ ವಿಶ್ವಕಪ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಚೇತರಿಸಿಕೊಂಡು ಸೆಮಿಫೈನಲ್ಗೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಹಾರ್ದಿಕ್ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಬೀಳುವಂತಾಗಿದೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಬೌಲಿಂಗ್ ಸಂದರ್ಭದಲ್ಲಿ ಕಾಲಿನ ನೋವಿಗೆ ತುತ್ತಾಗಿದ್ದರು. ಕೇವಲ ಮೂರು ಎಸೆತ ಬೌಲಿಂಗ್ ಮಾಡಿದ್ದ ಅವರು ನಂತರ ಮೈದಾನ ತೊರೆದಿದ್ದರು. ಆರಂಭದಲ್ಲಿ ಸಾಮಾನ್ಯ ಗಾಯ ಎಂದು ಭಾವಿಸಲಾಗಿತ್ತಾದರೂ ಬಳಿಕ ಗಾಯದ ತೀವ್ರತೆ ಹೆಚ್ಚಾಗಿರುವುದು ಕಂಡುಬಂದಿತ್ತು. ಹೀಗಾಗಿ ಎನ್ಸಿಎಗೆ ತೆರಳಿ ತಂಡಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದರು.

ಹಾರ್ದಿಕ್ ಪಾಂಡ್ಯ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಬದಲಿ ಆಟಗಾರನಾಗಿ ವೇಗದ ಬೌಲರ್ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಪ್ರತಿಭಾನ್ವಿತ ವೇಗಿಗೆ ಅದೃಷ್ಟ ಖುಲಾಯಿಸಿದೆ ಪ್ರಸಿದ್ಧ್ ಕೃಷ್ಣ ಕೂಡ ಸುದೀರ್ಘ ಕಾಲ ಗಾಯದಿಂದ ಮೈದಾನದಿಂದ ದೂರವಾಗಿದ್ದು ಈ ವರ್ಷ ಜಸ್ಪ್ರೀತ್ ಬೂಮ್ರಾ ಜೊತೆಗೆ ಖಳೆದ ಐರ್ಲೆಂಡ್ ಪ್ರವಾಸದ ಮೂಲಕ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದರು. ಆ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನಸೆಳೆದಿದ್ದರು.
ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಎಡ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಅದಾದ ಬಳಿಕ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಂದ ಅವರು ಹೊರಗುಳಿಯುವಂತಾಗಿತ್ತು. ಬೆಂಗಳೂರಿನ ರಿಹ್ಯಾಬ್ಗಾಗಿ ಎನ್ಸಿಎಗೆ ಸೇರಿಕೋಮಡಿದ್ದ ಅವರು ಸೆಮಿಫೈನಲ್ಗೂ ಮುನ್ನ ತಂಡಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಅಸಾಧ್ಯವಾಗಿರುವ ಕಾರಣ ಇದೀಗ ಅವರು ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಅಲಭ್ಯವಾಗುವಂತಾಗಿದೆ.