ವಿಶ್ವಕಪ್ ಟೂರ್ನಿಯಲ್ಲಿ ಇಂಡು ಟೀಮ್ ಇಂಡಿಯಾ ಶ್ರೀಲಂಕಾ ತಂಡವನ್ನು ಎದುರಿಸುತ್ತಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಿದೆ. ಟಾಸ್ ಗೆದ್ದಿರುವ ಶ್ರೀಲಂಕಾ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಟೀಮ್ ಇಂಡಿಯಾ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಿರೀಕ್ಷೆಯಂತೆಯೇ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ಕಳೆದ ಎರಡು ಪಂದ್ಯಗಳಲ್ಲಿ ಆಡಿದ ತಂಡವೇ ಈ ಪಂದ್ಯದಲ್ಲಿಯೂ ಆಡುತ್ತಿದೆ. ಇನ್ನು ಶ್ರೀಲಂಕಾ ತಂಡ ಈ ಪಂದ್ಯಕ್ಕಾಗಿ ಒಂದು ಬದಲಾವಣೆ ಮಾಡಿಕೊಂಡಿದೆ. ಧನಂಜಯ ಡಿಸಿಲ್ವ ಆಡುವ ಬಳಗದಿಂದ ಹೊರಬಿದ್ದಿದ್ದು ದುಶನ್ ಹೇಮಂತ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಈ ಬಾರಿಯ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆಡಿದ ಎಲ್ಲಾ ಆರು ಪಂದ್ಯಗಳಲ್ಲಿಯೂ ಭರ್ಜರಿ ಗೆಲುವು ಸಾಧಿಸಿದ್ದು ಟೂರ್ನಿಯ ಅಜೇಯ ತಂಡವಾಗಿ ಉಳಿದುಕೊಂಡಿದೆ. ಈ ಮೂಲಕ ಬಹುತೇಕ ಸೆಮಿಫೈನಲ್ಗೆ ಕಾಲಿಟ್ಟಿದ್ದು ಅಧಿಕೃತವಾಗಬೇಕಿದೆ. ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಕೇವಲ 230 ರನ್ಗಳನ್ನು ಕಲೆಹಾಕಿದ್ದರೂ ಭರ್ಜರಿ 100 ರನ್ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಇತ್ತ ಶ್ರೀಲಂಕಾ ತಂಡ ಆಡಿದ 6 ಪಂದ್ಯಗಳಲ್ಲಿ ಕೇವಲ 2 ಗೆಲುವು ಸಾಧಿಸಿದ್ದು 7ನೇ ಸ್ಥಾನದಲ್ಲಿದೆ.
ಇನ್ನು ಭಾರತ ಹಾಗೂ ಶ್ರೀಲಂಕಾ ತಂಡಗಳು 2011ರ ವಿಶ್ವಕಪ್ನ ಫೈನಲ್ ಪಂದ್ಯ ನಡೆದ ವಾಂಖೆಡೆ ಕ್ರೀಡಾಂಗಣದಲ್ಲಿಯೇ ಮುಖಾಮುಖಿಯಾಗುತ್ತಿರುವುದು ಕುತೂಹಲ ಕೆರಳಿಸಿದೆ. ಅಂದು ಭಾರತ ಶ್ರೀಲಂಕಾವನ್ನು ಮಣಿಸಿ ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಗೆದ್ದ ಸಾಧನೆ ಮಾಡಿತ್ತು.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಲ್ ಮೆಂಡಿಸ್ (ನಾಯಕ & ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ದುಶನ್ ಹೇಮಂತ, ಮಹೇಶ್ ತೀಕ್ಷಣ, ಕಸುನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ
ಬೆಂಚ್: ಧನಂಜಯ ಡಿ ಸಿಲ್ವಾ, ಚಾಮಿಕಾ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಕುಸಲ್ ಪೆರೇರಾ