
ಸೋಮವಾರ, ಮಾರ್ಚ್ 13ರಂದು ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡ ರೋಚಕ ಜಯ ಗಳಿಸಿದ ನಂತರ ಭಾರತ ತಂಡ ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC) ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ.
ಕೇನ್ ವಿಲಿಯಮ್ಸನ್ ಅವರ ಅಜೇಯ 121 ರನ್ ಮತ್ತು 86 ಎಸೆತಗಳನ್ನು ಸ್ಫೋಟಕ 81 ರನ್ ಗಳಿಸಿದ ಡೇರಿಲ್ ಮಿಚೆಲ್ ಜೋಡಿ ಅಸಾಧ್ಯವಾಗಿದ್ದ ಗೆಲುವನ್ನು ನ್ಯೂಜಿಲೆಂಡ್ ತಂಡಕ್ಕೆ ಕೊನೆಯ ಎಸೆತದಲ್ಲಿ ತಂದುಕೊಟ್ಟರು. ಇದರಿಂದ ಶ್ರೀಲಂಕಾ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸಿಗೆ ತಣ್ಣೀರೆರಚಿದಂತಾಯಿತು.
ಇನ್ನು ಜೂನ್ 7ರಿಂದ 11ರವರೆಗೆ ಲಂಡನ್ನ ಓವಲ್ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. 20 ವರ್ಷಗಳ ನಂತರ ಐಸಿಸಿ ಟೂರ್ನಿಯ ಫೈನಲ್ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಆಡುತ್ತಿದೆ. 2003ರ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಎರಡು ತಂಡಗಳು ಮುಖಾಮುಖಿಯಾಗಿದ್ದವು.
ಹೇಗಿರಲಿದೆ ಭಾರತ ತಂಡದ ಸಂಭಾವ್ಯ ಆಡುವ 11ರ ಬಳಗ?
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಫಾರ್ಮ್ನಲ್ಲಿರುವ ಶುಭ್ಮನ್ ಗಿಲ್ ಭಾರತ ತಂಡದ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಕಳಪೆ ಬ್ಯಾಟಿಂಗ್ ಫಾರ್ಮ್ನಲ್ಲಿರುವ ಕೆಎಲ್ ರಾಹುಲ್ ಆರಂಭಿಕರಾಗಿ ಆಯ್ಕೆಯಾಗುವ ಸಾಧ್ಯತೆ ಕಡಿಮೆ.

ಭಾರತ ತಂಡದ ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಇರಲಿದ್ದಾರೆ. ಆದರೆ, ಶ್ರೇಯಸ್ ಅಯ್ಯರ್ ಪದೇ ಪದೇ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ಸ್ಥಾನವನ್ನು ಇನ್ಫಾರ್ಮ್ ಆಟಗಾರ ಸರ್ಫರಾಜ್ ಖಾನ್ ಅಥವಾ ಸೂರ್ಯಕುಮಾರ್ ಯಾದವ್ ಪಡೆದುಕೊಳ್ಳಬಹುದು.
ಸೂರ್ಯಕುಮಾರ್ ಯಾದವ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರಭಾವಿ ಪ್ರದರ್ಶನ ನೀಡಲು ವಿಫಲರಾದ ಕಾರಣ, ದೇಶೀಯ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿರುವ ಸರ್ಫರಾಜ್ ಖಾನ್ ಹೆಸರು ಚಾಲ್ತಿಯಲ್ಲಿದೆ. ಶ್ರೇಯಸ್ ಅಯ್ಯರ್ ಫಿಟ್ ಆಗಿದಿದ್ದರೆ, ಸೂರ್ಯಕುಮಾರ್ ಯಾದವ್ಗಿಂತ ಮೊದಲು ಸರ್ಫರಾಜ್ ಖಾನ್ಗೆ ಆದ್ಯತೆ ಸಿಗುವ ಸಾಧ್ಯತೆ ಇದೆ.
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ 4 ಟೆಸ್ಟ್ ಪಂದ್ಯಗಳಲ್ಲಿ ಕೆಎಸ್ ಭರತ್ರನ್ನು ವಿಕೆಟ್ ಕೀಪರ್ ಆಗಿ ಆಡಿಸಲಾಯಿತು. ಕೆಲವು ಪಂದ್ಯಗಳಲ್ಲಿ ಕೆಎಸ್ ಭರತ್ ಉತ್ತಮ ಪ್ರದರ್ಶನ ನೀಡಿದ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಇಶಾನ್ ಕಿಶನ್ ಅವರಿಗಿಂತ ಆದ್ಯತೆ ಪಡೆಯಬಹುದು.

ಇನ್ನು ವೇಗದ ಬೌಲಿಂಗ್ ಆಲ್ರೌಂಡರ್ಗಳಲ್ಲಿ ಶಾರ್ದೂಲ್ ಠಾಕೂರ್ ಹೆಸರು ಮುಂಚೂಣಿಯಲ್ಲಿದ್ದರೂ, ಇತ್ತೀಚಿನ ವರದಿಯ ಪ್ರಕಾರ, ಬಿಸಿಸಿಐ ತನ್ನ ಟೆಸ್ಟ್ ಕ್ರಿಕೆಟ್ ಭವಿಷ್ಯವನ್ನು ನಿರ್ಧರಿಸಲು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಮೊದಲು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಸಮಾಲೋಚನೆ ನಡೆಸಲಿದೆ. ಹೀಗಾಗಿ ಶಾರ್ದೂಲ್ ಠಾಕೂರ್ ಅವರಿಗಿಂತ ಹಾರ್ದಿಕ್ ಪಾಂಡ್ಯ ಅವಕಾಶ ಪಡೆಯಲಿದ್ದಾರೆ.
ಇನ್ನು ಸ್ಪಿನ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಉತ್ತಮ ಫಾರ್ಮ್ನಲ್ಲಿರುವುದರಿಂದ ಇವರ ಸ್ಥಾನ ಖಚಿತವಾಗಿದೆ.
ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ವೇಗದ ಬೌಲಿಂಗ್ ದಾಳಿಯ ನೇತೃತ್ವ ವಹಿಸುವ ಸಾಧ್ಯತೆ ಇದೆ.
WTC 2023: ಭಾರತ ತಂಡದ ಸಂಭಾವ್ಯ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಸರ್ಫರಾಜ್ ಖಾನ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್.