ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಫಾರ್ಮ್ ಕಳೆದುಕೊಂಡಿದ್ದು ರನ್ ಗಳಿಸಲು ಪರದಾಡುತ್ತಿದ್ದಾರೆ. ಸೂರ್ಯ ಮುಂದಿನ ಪಂದ್ಯಗಳಲ್ಲಿ ರನ್ ಗಳಿಸದೇ ಇದ್ದರೆ ಜೂನ್ ತಿಂಗಳಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಭಾರತ ತಂಡಕ್ಕೆ ಆಯ್ಕೆಯಾಗುವುದು ಅನುಮಾನವಾಗಿದೆ.
ಸೂರ್ಯಕುಮಾರ್ ಯಾದವ್ 2022ರಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಸಾಕಷ್ಟು ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದರು. ಟಿ20 ಕ್ರಿಕೆಟ್ನಲ್ಲಿ ಶ್ರೇಷ್ಠ ಬ್ಯಾಟರ್ ಎನಿಸಿಕೊಂಡಿದ್ದರು. ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೇರಿದ ಅವರು, ಇನ್ನೂ ಮೊದಲ ಸ್ಥಾನವನ್ನು ಮುಂದುವರೆಸಿಕೊಂಡಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಫಾರ್ಮ್ ಆತಂಕಕ್ಕೆ ಕಾರಣವಾಗಿದೆ.

ಟಿ20 ಮಾದರಿಯಲ್ಲಿ ಅತ್ಯುತ್ತಮವಾಗಿ ಆಡುವ ಅವರು ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆದುಕೊಂಡರು, ಆದರೆ ಏಕದಿನ ಮಾದರಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾದರು. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಾನ ಪಡೆದ ಅವರು ರನ್ ಗಳಿಸಲು ವಿಫಲವಾದರು. ಶ್ರೇಯಸ್ ಅಯ್ಯರ್ ಗಾಯಗೊಂಡ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಆಡಲು ಸೂರ್ಯಕುಮಾರ್ ಮೊದಲ ಆಯ್ಕೆಯಾಗಿದ್ದರು.
ಟೆಸ್ಟ್ ಸರಣಿಯಲ್ಲಿ ಆಡಲು ಅವಕಾಶ ಪಡೆದರೂ ಉತ್ತಮ ರನ್ ಗಳಿಸಲು ಸಾಧ್ಯವಾಗಲಿಲ್ಲ. ನಂತರ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಡಕೌಟ್ ಆಗುವ ಮೂಲಕ ಕೆಟ್ಟ ದಾಖಲೆ ಮಾಡಿದರು. ಈಗ ನಡೆಯುತ್ತಿರುವ ಐಪಿಎಲ್ನಲ್ಲಿ ಕೂಡ ರನ್ ಬರವನ್ನು ಅನುಭವಿಸುತ್ತಿದ್ದಾರೆ.

ಸದ್ಯ ಸೂರ್ಯಕುಮಾರ್ ಯಾದವ್ ರನ್ ಗಳಿಸದೇ ಇರುವುದು ಭಾರತ ತಂಡದ ಮ್ಯಾನೇಜ್ಮೆಂಟ್ಗೆ ತಲೆನೋವಾಗಿದೆ. ಜೂನ್ 7 ರಿಂದ 12 ರವರೆಗೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬದಲೀ ಬ್ಯಾಟರ್ ನನ್ನು ಆಯ್ಕೆ ಮಾಡುವ ಬಗ್ಗೆ ಯೋಚನೆ ಮಾಡುತ್ತಿದೆ. ಒಂದು ವೇಳೆ ಮುಂದಿನ ಐಪಿಎಲ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೆ ಮಾತ್ರ ಅವರು ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಬಹುದಾಗಿದೆ.
ವಿದೇಶದಲ್ಲಿ ನೀಡಿರುವ ಪ್ರದರ್ಶನವನ್ನು ಗಮನಿಸಿ ಕೆಎಲ್ ರಾಹುಲ್ ತಮ್ಮ ಸ್ಥಾನವನ್ನು ಉಳಿಸಿಕೊಂಡರೂ, ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಲು ಉತ್ತಮ ಬ್ಯಾಟರ್ ಅಗತ್ಯವಿದೆ. ಸೂರ್ಯಕುಮಾರ್ ಯಾದವ್ ಮೊದಲನೇ ಆಯ್ಕೆಯಾಗಿದ್ದರೂ, ಇತ್ತೀಚಿನ ಪ್ರದರ್ಶನ ಬಿಸಿಸಿಐ ತಂಡಕ್ಕೆ ಬೇರೆ ಯೋಚನೆ ಮಾಡಲು ಉತ್ತೇಜನ ನೀಡಿದೆ.

ಸೂರ್ಯಕುಮಾರ್ ಯಾದವ್ ಬದಲಾಗಿ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟರ್ ಹನುಮ ವಿಹಾರಿ ಭಾರತ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. ಬಿಸಿಸಿಐ ಕೂಡ ಹನುಮ ವಿಹಾರಿ ಆಯ್ಕೆ ಮಾಡುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ವಿಹಾರಿ ಆಸ್ಟ್ರೇಲಿಯಾ ವಿರುದ್ಧ ಮತ್ತು ಇಂಗ್ಲೆಂಡ್ನಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಇದೇ ಕಾರಣಕ್ಕೆ 4ನೇ ಕ್ರಮಾಂಕದಲ್ಲಿ ಆಡಲು ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಚೇತೇಶ್ವರ ಪೂಜಾರ ತಂಡದ ಉಪನಾಯಕನಾಗಿ ಮುಂದುವರೆಯುವ ಸಾಧ್ಯತೆ ಇದೆ. ಕಳೆದ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ಉಪನಾಯಕರಾಗಿದ್ದರು. ಇಂಗ್ಲೆಂಡ್ನಲ್ಲಿ ಟೆಸ್ಟ್ ಕ್ರಿಕೆಟ್ ಆಡಿ ಅಪಾರ ಅನುಭವ ಹೊಂದಿರುವ ಪೂಜಾರ, ಕೌಂಟಿ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲಿದ್ದು, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗಾಗಿ ತಯಾರಿ ನಡೆಸಲಿದ್ದಾರೆ. ಏಪ್ರಿಲ್ ಕೊನೆಯಲ್ಲಿ ಅಥವಾ ಮೇ ಮೊದಲನೇ ಭಾರತ ತಂಡವನ್ನು ಘೋಷಿಸುವ ಸಾಧ್ಯತೆ ಇದೆ.