
ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿಯ ರೇಸ್ ಕೊನೆಗೂ ಮುಕ್ತಾಯವಾಗಿದೆ. ಒಂದು ಕಡೆ ಭಾರತ ಅಮೋಘ ಪ್ರದರ್ಶನದಿಂದ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ಗಾಗಿ ಹೋರಾಡುತ್ತಿರುವಾಗ, ಶ್ರೀಲಂಕಾ ತಂಡವನ್ನು ಸೋಲಿಸಿದ ನ್ಯೂಜಿಲೆಂಡ್ ಭಾರತದ ಫೈನಲ್ ಹಾದಿಯನ್ನು ಮುಕ್ತಗೊಳಿಸಿದೆ.
ಜೂನ್ 7ರಿಂದ ಲಂಡನ್ನ ಓವಲ್ ಅಂಗಳದಲ್ಲಿ ಬಲಿಷ್ಠ ಭಾರತ ಮತ್ತು ಆಸ್ಟ್ರೇಲಿಯಾ ಪಡೆಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟಕ್ಕಾಗಿ ಸೆಣೆಸಾಡಲಿವೆ. ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲೇ ಸೋತ ಶ್ರೀಲಂಕಾ ತನ್ನ ಹೋರಾಟವನ್ನು ಕೊನೆಗೊಳಿಸಿದೆ.
ಕೇನ್ ವಿಲಿಯಮ್ಸನ್ ಅಮೋಘ ಶತಕ ಮತ್ತು ಡೇರಿ ಮಿಚೆಲ್ರ ಅತ್ಯದ್ಭುತ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ಕ್ರಿಸ್ಟ್ಚರ್ಚ್ನಲ್ಲಿ ನಡೆದ ಮೊದಲನೇ ಟೆಸ್ಟ್ ಕೊನೆಯ ಎಸೆತದಲ್ಲಿ ರನ್ ಗಳಿಸುವ ಮೂಲಕ 2 ವಿಕೆಟ್ಗಳ ರೋಚಕ ಜಯ ಸಾಧಿಸಿತು.
ಭಾರತ ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್ನ ಕೊನೆಯ ದಿನದಾಟ ನಡೆಯುತ್ತಿದ್ದು, ಪಂದ್ಯ ಬಹುತೇಕ ಡ್ರಾನಲ್ಲಿ ಕೊನೆಯಾಗುವುದು ಖಚಿತವಾಗಿದೆ. ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಅಮೋಘ ಶತಕದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್ನಲ್ಲಿ ಮುನ್ನಡೆ ಪಡೆದುಕೊಂಡಿತು. ಎರಡನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ಕೂಡ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದು, ಡ್ರಾ ಫಲಿತಾಂಶವನ್ನು ನಿರೀಕ್ಷೆ ಮಾಡಲಾಗಿದೆ.

ನಾಲ್ಕನೇ ಸ್ಥಾನಕ್ಕೆ ಕುಸಿದ ಶ್ರೀಲಂಕಾ
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಸೋತ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಶ್ರೀಲಂಕಾ 4ನೇ ಸ್ಥಾನಕ್ಕೆ ಕುಸಿತ ಕಂಡಿದೆ. ವೆಸ್ಟ್ ಇಂಡೀಸ್ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ದಕ್ಷಿಣ ಆಫ್ರಿಕಾ ಮೂರನೇ ಸ್ಥಾನಕ್ಕೆ ಜಿಗಿದಿದೆ. ಶ್ರೀಲಂಕಾ ಸದ್ಯ 48.48 ಪಿಸಿಟಿ (ಗೆಲುವಿನ ಶೇಕಡವಾರು) ಹೊಂದಿದ್ದು ನಾಲ್ಕನೇ ಸ್ಥಾನದಲ್ಲಿದೆ.
ದಕ್ಷಿಣ ಆಫ್ರಿಕಾ 55.56 ಪಿಸಿಟಿಯೊಂದಿಗೆ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಭಾರತ 60.29 ಪಿಸಿಟಿಯೊಂದಿಗೆ ಎರಡನೇ ಸ್ಥಾನದಲ್ಲಿದ್ದು ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ. 68.52 ಪಿಸಿಟಿ ಹೊಂದಿರುವ ಆಸ್ಟ್ರೇಲಿಯಾ ಅಗ್ರಸ್ಥಾನದೊಂದಿಗೆ ಫೈನಲ್ ಪ್ರವೇಶಿಸಿದೆ. 2021-2023ರ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಚಕ್ರ ಶ್ರೀಲಂಕಾ-ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದೊಂದಿಗೆ ಮುಗಿಯಲಿದ್ದು, ಜೂನ್ 7ರಂದು ಫೈನಲ್ ಪಂದ್ಯ ನಡೆಯಲಿದೆ.

ಕಳೆದ ಬಾರಿಯ ರನ್ನರ್ ಅಪ್ ಆಗಿದ್ದ ಭಾರತ
2019-21ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಭಾರತ-ನ್ಯೂಜಿಲೆಂಡ್ ಮುಖಾಮುಖಿಯಾಗಿದ್ದವು. ಇಂಗ್ಲೆಂಡ್ನ ಸೌತಾಂಪ್ಟನ್ನಲ್ಲಿ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿದ್ದ ನ್ಯೂಜಿಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಮಳೆಯಿಂದಾಗಿ ಪಂದ್ಯಕ್ಕೆ ಅಡ್ಡಿಯಾಗಿದ್ದು ಭಾರತದ ಸೋಲಿಗೆ ಪ್ರಮುಖ ಕಾರಣವಾಯಿತು. ಇದೇ ಕಾರಣಕ್ಕಾಗಿ ಈ ಬಾರಿಯ ಫೈನಲ್ ಪಂದ್ಯಕ್ಕಿ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಕಳೆದ ಬಾರಿ ರನ್ನರ್ ಅಪ್ ಆಗಿದ್ದ ಭಾರತ, ಈ ಬಾರಿ ಐಸಿಸಿ ಟ್ರೋಫಿಯನ್ನು ಗೆಲ್ಲುವ ಉತ್ಸಾಹದಲ್ಲಿದೆ.