ಬಹು ನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಆರಂಭವಾಗಿದೆ. ಈ ಸರಣಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಲಿವೆ. ಐದು ಪಂದ್ಯಗಳ ಟೆಸ್ಟ್ ಸರಣಿಯ ಈ ಪಂದ್ಯಕ್ಕೆ ಲೀಡ್ಸ್ ಮೈದಾನ ಸಾಕ್ಷಿಯಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾಕ್ಕೆ ಅನುಭವಿಗಳ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸಾಯಿ ಸುದರ್ಶನ್ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬೌಲಿಂಗ್ ಮಾಡಲು ನಿರ್ಧರಿಸಿದೆ.
ರೋಹಿತ್ ಶರ್ಮಾ ಅವರಿಂದ ತೆರವಾದ ನಾಯಕತ್ವ ಸ್ಥಾನವನ್ನು ಯುವ ಬ್ಯಾಟರ್ ಶುಭಮನ್ ಗಿಲ್ ತುಂಬಲಿದ್ದಾರೆ. ಇವರು ಯುವ ಬ್ರಿಗೇಡ್ನ್ನು ಇಂಗ್ಲೆಂಡ್ನಲ್ಲಿ ಮುನ್ನಡೆಸಲಿದ್ದಾರೆ. ಸಾಲು ಸಾಲು ಸವಾಲುಗಳನ್ನು ಟೀಮ್ ಇಂಡಿಯಾ ಹೇಗೆ ಮೆಟ್ಟಿ ನಿಲ್ಲುತ್ತದೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಗುಜರಾತ್ ಟೈಟಾನ್ಸ್ ತಂಡದ ಸಾಯಿ ಸುದರ್ಶನ್ ಇಂಗ್ಲೆಂಡ್ನಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಇವರು ಶುಕ್ರವಾರದಿಂದ ಆರಂಭವಾದ ಆಂಡರ್ಸನ್-ತೆಂಡೂಲ್ಕರ್ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದಿದ್ದಾರೆ. ಇವರಿಗೆ ಭಾರತ ತಂಡದ ಟೆಸ್ಟ್ ಕ್ಯಾಪ್ನ್ನು ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟರ್ ಚೇತೇಶ್ವರ್ ಪೂಜಾರ ನೀಡಿದರು.
ಸಾಯಿ ಸುದರ್ಶನ್ ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಅಲ್ಲದೆ ದೇಶೀಯ ಟೂರ್ನಿಯಲ್ಲಿ ರನ್ ಮಹಲ್ ಕಟ್ಟಿದ್ದರು. ಇವರು ಐಪಿಎಲ್ನಲ್ಲಿ ಆಡಿದ 15 ಪಂದ್ಯಗಳಲ್ಲಿ 54ರ ಸರಾಸರಿಯಲ್ಲಿ 759 ರನ್ ಸಿಡಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 6 ಅರ್ಧಶತಕಗಳು ಸೇರಿವೆ. ಈ ಪ್ರದರ್ಶನದ ಮೂಲಕ ಸಾಯಿ ಸುದರ್ಶನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಆಗಿದ್ದಾರೆ.
ಶುಭಮನ್ ಗಿಲ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿದ್ದು, ಇವರ ಸ್ಥಾನದಲ್ಲಿ ಅಂದರೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದ್ದು, ಇದಕ್ಕೆ ಉತ್ತರವೂ ಲಭಿಸಿದೆ. ಈ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಇಬ್ಬರು ಆಲ್ರೌಂಡರ್ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್ ಕೀಪರ್ ಆಗಿ ರಿಷಭ್ ಪಂಥ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಲೀಡ್ಸ್ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಆರಂಭಿಕರಾಗಿ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದರೆ, ಕರುಣ್ ನಾಯರ್ ಮಧ್ಯಮ ಕ್ರಮಾಂಕದಲ್ಲಿ ಹಾಗೂ ವೇಗದ ಬೌಲರ್ ಆಗಿ ಪ್ರಸಿದ್ಧ ಕೃಷ್ಣ ಸ್ಥಾನ ಪಡೆಸಿದ್ದಾರೆ.
ಇಂಗ್ಲೆಂಡ್ ತಂಡ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಸಿರಾಜ್