ಜುಲೈ 23 ಮಂಗಳವಾರ, ಈಗಾಗಲೇ ಭಾರತ ತಂಡವು ಶ್ರೀಲಂಕಾ ತಲುಪಿದ್ದು, ಮೂರು ಟಿ20 ಹಾಗೂ ಅಷ್ಟೇ ಸಂಖ್ಯೆಯ ಏಕದಿನ ಪಂದ್ಯಗಳ ಸರಣಿ ಆಡಲಿದೆ.
ಆಯ್ಕೆಗಾರರು ಇತ್ತೀಚೆಗೆ ಶ್ರೀಲಂಕಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದರು. ಶ್ರೀಲಂಕಾ ವಿರುದ್ಧ ಟಿ20 ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರನನ್ನು ಭಾರತ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಈ ಆಟಗಾರರನ್ನು ಕಡೆಗಣಿಸಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ.

ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಶ್ರೀಲಂಕಾ ಪ್ರವಾಸದ ತಂಡದಲ್ಲಿ ಟೀಮ್ ಇಂಡಿಯಾ ಪರ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ಸೇರಿಸಿಕೊಂಡಿಲ್ಲ.
ಈ ಅನುಭವಿ ಬೌಲರ್ ಶ್ರೀಲಂಕಾ ಮತ್ತು ಭಾರತದ ನಡುವೆ ಇಲ್ಲಿಯವರೆಗೆ ನಡೆದ ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಹೊಂದಿದ್ದಾರೆ. ಶ್ರೀಲಂಕಾ ವಿರುದ್ಧ ಚಹಾಲ್ 13 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, 23 ವಿಕೆಟ್ಗಳನ್ನು ಪಡೆದಿದ್ದಾರೆ.
ಶ್ರೀಲಂಕಾ ವಿರುದ್ಧ ಇಂತಹ ಅದ್ಭುತ ದಾಖಲೆಯನ್ನು ಹೊಂದಿರುವ ಚಹಾಲ್ ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ತಂಡದಿಂದ ಹೊರಗಿಟ್ಟು ತಪ್ಪು ಮಾಡಿತೇ? ಎಂಬ ಪ್ರಶ್ನೆ ಉದ್ಭವಿಸಿದೆ. 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಚಹಾಲ್ ಅವರಿಗೆ ಒಂದೇ ಒಂದು ಪಂದ್ಯದಲ್ಲಿ ಕಣಕ್ಕೀಳಿಯುವ ಅವಕಾಶ ಸಿಕ್ಕಿರಲಿಲ್ಲ.
ಶ್ರೀಲಂಕಾ ಪ್ರವಾಸಕ್ಕೆ ಆಯ್ಕೆಯಾದ ಭಾರತ ಟಿ20 ತಂಡದ ಅಗ್ರ ವಿಕೆಟ್ ಟೇಕರ್ಗಳ ಬೌಲರ್ಸ್ ಬಗ್ಗೆ ನೋಡುವುದಾರೆ, ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಟಾಪ್-2 ನಲ್ಲಿದ್ದಾರೆ. ಶ್ರೀಲಂಕಾ ವಿರುದ್ಧ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಹಾರ್ದಿಕ್ ಪಾಂಡ್ಯ 11 ವಿಕೆಟ್ಗಳನ್ನು ಉರುಳಿಸಿದ್ದಾರೆ.
ಜಸ್ಪ್ರೀತ್ ಬುಮ್ರಾ 12 ಪಂದ್ಯಗಳಲ್ಲಿ 9 ವಿಕೆಟ್ ಕಬಳಿಸಿದ್ದಾರೆ. ವಾಷಿಂಗ್ಟನ್ ಸುಂದರ್ (8) ಪ್ರಸ್ತುತ ಟಿ20 ತಂಡದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.
1ನೇ ಟಿ20 - 27 ಜುಲೈ
2ನೇ ಟಿ20 - 28 ಜುಲೈ
3ನೇ ಟಿ20 - 30 ಜುಲೈ