ಬೆಂಗಳೂರು, ಅಕ್ಟೋಬರ್ 26: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ (25) ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯ ಆದರ್ಶ ನಗರದ ನಿವಾಸದಲ್ಲಿ ಯುವ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ನೇಣಿಗೆ ಶರಣಾಗಿದ್ದಾಳೆ.

ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೈಸೂರು ದಸರಾದ ಜಂಬೂಸವಾರಿ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನುಮಾನಗೊಂಡ ತಂದೆ ರೂಮ್ಗೆ ಹೋಗಿ ನೋಡಿದಾಗ ಆತ್ಮಹತ್ಯೆಯ ಪ್ರಕರಣ ಬೆಳಕಿಗೆ ಬಂದಿದೆ.
ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರ ನಿವಾಸಿಯಾಗಿರುವ ಧನಲಕ್ಷ್ಮೀ, ಕಳೆದ 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆ ಆದರ್ಶನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.
ಈ ಬಗ್ಗೆ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೋ ವಿಚಾರದಲ್ಲಿ ಮನನೊಂದು ಸ್ವತಃ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಮೈಸೂರು ಸುತ್ತಾಡಿ ಬಂದಿದ್ದ ಧನಲಕ್ಷ್ಮೀ, ಏಕಾಏಕಿ ಗುರುವಾರ, ಅಕ್ಟೋಬರ್ 26ರಂದು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಅಚ್ಚರಿಕೆಗೆ ಕಾರಣವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.