ಬೆಂಗಳೂರು, ಫೆಬ್ರವರಿ 1: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸುವ ಆದೇಶ ನೀಡಲಾಗಿದೆ.
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಿಗೂ ಅನ್ವಯಿಸುವಂತೆ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ಒದಗಿಸಲು ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ತಿದ್ದುಪಡಿ ನಿಯಮಗಳು-2024ಕ್ಕೆ ಗುರುವಾರ, ಫೆಬ್ರವರಿ 1ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಪ್ರಸ್ತುತ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯಲ್ಲಿನ ನೇಮಕಾತಿಗೆ ಮಾತ್ರ ಕ್ರೀಡಾ ಮೀಸಲಾತಿ ಇದೆ. 2021ರಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್, ಸಬ್ ಇನ್ಸ್ಪೆಕ್ಟರ್, ಪೊಲೀಸ್ ಉಪ ಅಧೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವಾಗ ಶೇ.2ಕ್ಕಿಂತ ಹೆಚ್ಚಿಲ್ಲದ ಹುದ್ದೆಗಳನ್ನು ಕ್ರೀಡಾ ಮೀಸಲಾತಿಯಡಿ ನೇಮಕ ಮಾಡಿಕೊಳ್ಳಬಹುದು ಎಂದು ಅಧಿಸೂಚನೆ ಹೊರಡಿಸಲಾಗಿತ್ತು.

ಇದೀಗ ಕರ್ನಾಟಕ ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳಿಗೂ ಅನ್ವಯವಾಗುವಂತೆ ಶೇ.2ರಷ್ಟು ಕ್ರೀಡಾ ಮೀಸಲಾತಿ ಜಾರಿಗೆ ತರುವ ಮೂಲಕ ಐತಿಹಾಸಿಕ ನಿರ್ಧಾರಕ್ಕೆ ಮುಂದಾಗಿದೆ.
ಇದಕ್ಕಾಗಿ ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ತರಲಾಗುವುದು. ಈ ಕುರಿತು ತಿದ್ದುಪಡಿ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲೇ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು.