ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು ಅವರು 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿದ್ದರು.
ತಮ್ಮ ಆರನೇ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ನಂತರ ಭಾರತೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದರು. ಇದೀಗ ತಮ್ಮ ಬದುಕಿನ 2ನೇ ಇನ್ನಿಂಗ್ಸ್ ಆರಂಭಿಸಲು ರಾಜಕೀಯ ಜಗತ್ತಿಗೆ ಕಾಲಿಡಲು ಸಿದ್ಧರಾಗಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, 2019ರ ಏಕದಿನ ವಿಶ್ವಕಪ್ ತಂಡದಿಂದ ವಿವಾದಾತ್ಮಕವಾಗಿ ಹೊರಗುಳಿದ 37 ವರ್ಷದ ಅಂಬಟಿ ರಾಯುಡು, ಆಂಧ್ರಪ್ರದೇಶದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷವನ್ನು (ವೈಎಸ್ಆರ್ಸಿಪಿ) ಸೇರುವ ನಿರೀಕ್ಷೆಯಿದೆ ಮತ್ತು ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.
ಅಂಬಟಿ ರಾಯುಡು ಅವರು ಕೃಷ್ಣಾ ಅಥವಾ ಗುಂಟೂರು ಜಿಲ್ಲೆಗಳಲ್ಲಿ ಸ್ಪರ್ಧಿಸಲು ಯೋಚಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಸ್ವತಃ ಗುಂಟೂರು ಮೂಲದ ಮಾಜಿ ಕ್ರಿಕೆಟಿಗ, ಆಂಧ್ರಪ್ರದೇಶ ಮುಖ್ಯಮಂತ್ರಿ ಮತ್ತು ವೈಎಸ್ಆರ್ಸಿಪಿ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಕಳೆದ ವಾರ ಎರಡು ಬಾರಿ ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಅಂಬಟಿ ರಾಯುಡು ಅವರನ್ನು ಕಣಕ್ಕಿಳಿಸಲು ಜಗನ್ ಮೋಹನ್ ರೆಡ್ಡಿ ಆಸಕ್ತಿ ತೋರಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಅವರು ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ.
"ಸಿಎಂ ಜಗನ್ ಮೋಹನ್ ರೆಡ್ಡಿ ಅವರು ರಾಜಕೀಯ ಪ್ರವೇಶಿಸುವ ಯುವಕರಿಗೆ ಉತ್ತಮ ಸ್ಫೂರ್ತಿಯಾಗಿದ್ದಾರೆ. ಅವರು ಕೇವಲ ಒಂದು ಕ್ಷೇತ್ರಕ್ಕೆ ಗಮನ ನೀಡದೆ, ಎಲ್ಲಾ ಪ್ರದೇಶಗಳ ಅಭಿವೃದ್ಧಿಗೆ ಚಾಲನೆ ನೀಡುತ್ತಿದ್ದಾರೆ," ಎಂದು ಅಂಬಟಿ ರಾಯುಡು ಅವರು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಬಗ್ಗೆ ತಮ್ಮ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಜಗನ್ ಮೋಹನ್ ರೆಡ್ಡಿ ಅವರ ನಿರ್ಧಾರಕ್ಕೆ ಸಮ್ಮತಿ ಸೂಚಿಸುವುದಾಗಿಯೂ ತಿಳಿಸಿದ್ದಾರೆ.
ಅಂಬಟಿ ರಾಯುಡು ಅವರು ಪೊನ್ನೂರು ಅಥವಾ ಗುಂಟೂರು ಪಶ್ಚಿಮ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಪರಿಗಣಿಸಬೇಕು. ಇನ್ನು ಲೋಕಸಭೆ ಚುನಾವಣೆಗೆ ಮಚಲಿಪಟ್ಟಣ ಕ್ಷೇತ್ರವನ್ನು ಪರಿಗಣಿಸಬೇಕು ಎಂದು ವೈಎಸ್ಆರ್ಸಿಪಿ ಪಕ್ಷದ ಮೂಲಗಳು ತಿಳಿಸಿವೆ.
2024ರ ಲೋಕಸಭೆ ಚುನಾವಣೆಗೆ ಇನ್ನು ಕೇವಲ ಎಂಟು ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಕೆಲವೇ ದಿನಗಳಲ್ಲಿ ಅಂಬಟಿ ರಾಯುಡು ಅವರಿಂದ ಯಾವುದೇ ನಿರ್ಧಾರ ಅಧಿಕೃತವಾಗಿ ಹೊರಬೀಳಬಹುದು.
ಪ್ರಸ್ತುತ, ಐಪಿಎಲ್ ಮತ್ತು ಭಾರತೀಯ ಕ್ರಿಕೆಟ್ನಿಂದ ನಿವೃತ್ತಿ ಪಡೆದಿರುವ ಅಂಬಟಿ ರಾಯುಡು ಮೇಜರ್ ಲೀಗ್ ಕ್ರಿಕೆಟ್ (ಎಂಎಲ್ಸಿ)ನಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯ ತಂಡವಾಗಿರುವ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.