
ಶುಕ್ರವಾರ, ಫೆಬ್ರವರಿ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡು ತಿಂಗಳ ಮುಂಚಿತವಾಗಿ ಆಯವ್ಯಯ ಮಂಡಿಸಿದರು.
ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕ್ರೀಡಾ ಕ್ಷೇತ್ರಕ್ಕೂ ಅನುದಾನ ನೀಡಿದ್ದಾರೆ. ಅದರಲ್ಲೂ ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗಳನ್ನು ಉತ್ತೇಜಿಸಲು ಕ್ರಮಕೈಗೊಂಡಿದ್ದಾರೆ. ಅವುಗಳು ಈ ಕೆಳಗಿನಂತಿದೆ.
* ಬೆಂಗಳೂರಿನ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಿಲಾಗುವುದು.
* ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
* ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂ.ಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುವುದು.

* ಬಾಸ್ಕೆಟ್ಬಾಲ್ ಮತ್ತು ವಾಲಿಬಾಲ್ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ಕೇಂದ್ರಗಳನ್ನು ನಿರ್ಮಿಸಲಾಗುವುದು.
* ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಗುವುದು.
* ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಲಾಗುವುದು.
* ಒಲಿಂಪಿಕ್ಸ್ ಮತ್ತು ಇತರ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುಕೂಲವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ (Karnataka Olympic Dream Project Fund) ಸ್ಥಾಪಿಸಲಾಗುವುದು. ಈ ಯೋಜನೆಯಡಿ 12ರಿಂದ 19 ವರ್ಷ ವಯಸ್ಸಿನವರೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವ ಯುವ ಪ್ರತಿಭಾವಂತ ಕ್ರೀಡಾಪಟುಗಳ ಪ್ರಾಯೋಜನೆ ಮಾಡಲಾಗುವುದು.