ಶುಕ್ರವಾರ, ಫೆಬ್ರವರಿ 16ರಂದು ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಪೂರ್ಣ ಪ್ರಮಾಣದ ಆಯವ್ಯಯ (ಬಜೆಟ್) ಮಂಡಿಸಿದರು.
ಇದೇ ವೇಳೆ 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕಗಳನ್ನು ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರೀ ಮೊತ್ತದ ಬಹುಮಾನವನ್ನು ಘೋಷಿಸಿದರು.

ಇನ್ನು ಪ್ರತಿ ವರ್ಷವೂ ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್ ಆಯೋಜನೆ ಮಾಡಲು ಬೆಂಗಳೂರು ಉತ್ತರ ತಾಲೂಕಿನಲ್ಲಿ 70 ಎಕರೆ ವಿಸ್ತೀರ್ಣದಲ್ಲಿ ಸ್ಪೋರ್ಟ್ಸ್ ಸಿಟಿಯನ್ನು ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ಮಿನಿ ಒಲಿಂಪಿಕ್ಸ್ನಲ್ಲಿ ಪ್ರಥಮ, ದ್ವಿತಿಯ, ತೃತೀಯ ಸ್ಥಾನ ಪಡೆದವರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ಏಷ್ಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂಪಾಯಿ, ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂಪಾಯಿ ಮತ್ತು ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದ ವತಿಯಿಂದಲೇ ಒದಗಿಸಲಾಗುವುದು ಎಂದು ತಿಳಿಸಿದರು.
2024ರ ಜುಲೈ 26ರಿಂದ ಆಗಸ್ಟ್ 11ರವರೆಗೆ ಫ್ರಾನ್ಸ್ನ ರಾಜಧಾನಿ ಪ್ರೇಮನಗರಿ ಪ್ಯಾರಿಸ್ನಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. ವಿಶ್ವದ ಸಾವಿರಾರು ಕ್ರೀಡಾಪಟುಗಳು ಸೇರಲಿದ್ದು, ಇದೇ ವೇಳೆ ಭಾರತೀಯ ಅಥ್ಲೀಟ್ಗಳ ಪ್ರದರ್ಶನ ಹಾಗೂ ಪದಕ ಗಳಿಕೆ ಕುರಿತು ಈಗಾಗಲೇ ಸಿದ್ಧತೆ ಮತ್ತು ಲೆಕ್ಕಾಚಾರ ಆರಂಭವಾಗಿದೆ.