
4ನೇ ಆವೃತ್ತಿಯ ಎಸ್ಬಿಐ ಖೇಲೋ ಇಂಡಿಯಾ ಯೂತ್ ಗೇಮ್ಸ್ಗೆ ದಿನಗಣನೆ (ಜೂನ್ 4ರಿಂದ) ಆರಂಭಗೊಂಡಿದ್ದು, ಶನಿವಾರ ಪಂಚಕುಲಾದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಅಧಿಕೃತ ಚಿಹ್ನೆ (ಲೋಗೋ), ಮಾಸ್ಕಟ್, ಜೆರ್ಸಿ ಹಾಗೂ ಗೀತೆಯನ್ನು ಅನಾವರಣಗೊಳಿಸಲಾಯಿತು.
ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಹಾಗೂ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಶ್ರೀ ಅನುರಾಗ್ ಠಾಕೂರ್ ಅವರನ್ನೊಳಗೊಂಡಂತೆ ಭಾರೀ ಸಂಖ್ಯೆಯಲ್ಲಿ ಪ್ರೇಕ್ಷಕರು ನೆರೆದಿದ್ದರು. ಈ ಕ್ರೀಟಕೂಟಕ್ಕೆ ಅತ್ಯುತ್ತಮ ವೇದಿಕೆ ನಿರ್ಮಾಣವಾಗಿದ್ದು ಈ ಬಾರಿ ಡ್ರೀಮ್-11 ಬೆಂಬಲ ದೊರೆತಿದೆ ಮತ್ತು ಪಿಎನ್ಬಿ ಸಂಸ್ಥೆಯು ಸಹಾಯಕ ಪ್ರಾಯೋಜಕರಾಗಿ ಸೇರ್ಪಡೆಗೊಂಡಿದೆ.
'ಈ ಆವೃತ್ತಿಯ ಖೇಲೋ ಗೇಮ್ಸ್ ಆಯೋಜಿಸುತ್ತಿರುವುದಕ್ಕೆ ಬಹಳ ಹೆಮ್ಮೆ ಹಾಗೂ ಖುಷಿ ಇದೆ. ದೇಶದ ಯುವ ಕ್ರೀಡಾ ಪ್ರತಿಭೆಗಳನ್ನು ನಮ್ಮ ರಾಜ್ಯಕ್ಕೆ ಸ್ವಾಗತಿಸಲು ಕಾತರಿಸುತ್ತಿದ್ದೇವೆ' ಎಂದು ಸಿಎಂ ಮನೋಹರ್ ಲಾಲ್ ಹೇಳಿದರು.
ಇದೇ ವೇಳೆ ಹರಿಯಾಣದ ಕ್ರೀಡಾ ಸಂಸ್ಕೃತಿಯ ಬಗ್ಗೆ ನೆನೆದ ಮುಖ್ಯಮಂತ್ರಿ ಮನೋಹರ್ ಲಾಲ್ ಅವರು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಲು ಅತಿಹೆಚ್ಚು ಕ್ರೀಡಾಪಟುಗಳನ್ನು ಹರಿಯಾಣಗೆ ಕಳುಹಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಿದರು.
''ಬಹುಮುಖ್ಯವಾಗಿ ಒಲಿಂಪಿಕ್ಸ್ ಹಾಗೂ ಇನ್ನಿತರ ಮಹತ್ವದ ಕ್ರೀಡಾಕೂಟಗಳಲ್ಲಿ ಭಾರತ ಗೆದ್ದಿರುವ ಒಟ್ಟು ಪದಕಗಳ ಪೈಕಿ ಮೂರನೇ ಒಂದು ಭಾಗ ಪದಕಗಳನ್ನು ಹರಿಯಾಣದ ಕ್ರೀಡಾಪಟುಗಳೇ ಜಯಿಸಿದ್ದಾರೆ ಎನ್ನುವುದು ಬಹಳ ಸಂತೋಷದ ಸಂಗತಿ'' ಎಂದು ಅವರು ಖುಷಿಯಿಂದ ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಖೇಲೋ ಇಂಡಿಯಾ ಯೂಥ್ ಗೇಮ್ಸ್ ಭಾರತದಲ್ಲಿ ಕ್ರೀಡಾ ಕ್ರಾಂತಿಗೆ ಕಾರಣವಾಗಿದ್ದು, 4ನೇ ಆವೃತ್ತಿಯು ಜೂನ್ 4ರಿಂದ ಆರಂಭಗೊಳ್ಳಲಿದೆ. ಈ ಆವೃತ್ತಿಯಲ್ಲಿ ಕರ್ನಾಟಕ ಸೇರಿದಂತೆ ಬಹುತೇಕ ಎಲ್ಲಾ ರಾಜ್ಯಗಳ ಒಟ್ಟು 8000 ವಿದ್ಯಾರ್ಥಿಗಳು, 25 ಕ್ರೀಡೆಗಳಲ್ಲಿ ಸ್ಪರ್ಧಿಸಲಿದ್ದಾರೆ. ಈ ಪೈಕಿ ಐದು ಸಾಂಪ್ರಾದಾಯಿಕ ಕ್ರೀಡೆಗಳಾದ ಗಟ್ಕಾ, ಕಳರಿಪಯಟ್ಟು, ಥಾಂಗ್-ತಾ, ಮಲ್ಲಕಂಬ ಹಾಗೂ ಯೋಗಾಸನ ಸಹ ಸೇರಿವೆ. ಇವುಗಳನ್ನು ಪ್ರದರ್ಶನ ಕ್ರೀಡೆಗಳಾಗಿ ಸೇರ್ಪಡೆಗೊಳಿಸಲಾಗಿದೆ.
''ಇತ್ತೀಚಿನ ದಿನಗಳಲ್ಲಿ ನಮ್ಮ ಕ್ರೀಡಾಪಟುಗಳು ಜಾಗತಿಕ ಮಟ್ಟದಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಹಲವು ಯುವ ಪ್ರತಿಭೆಗಳಿಗೆ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಅವಕಾಶಗಳು ಸಿಗುತ್ತಿದ್ದು, ಖೇಲೋ ಇಂಡಿಯಾ ಯೂಥ್ ಹಾಗೂ ಯೂನಿವರ್ಸಿಟಿ ಗೇಮ್ಸ್ನಿಂದ ಪ್ರತಿಭೆಗಳು ಹೊರಬರುತ್ತಿದ್ದಾರೆ ಎನ್ನುವ ವಿಚಾರ ಖುಷಿ ನೀಡುತ್ತಿದೆ ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದರು. ಒಲಿಂಪಿಕ್ಸ್ನಲ್ಲಿ ಭಾರತ ಅಗ್ರ 10ರಲ್ಲಿ ಸ್ಥಾನ ಪಡೆಯಬೇಕು ಎನ್ನುವುದು ಪ್ರಧಾನಿ ಮೋದಿ ಅವರ ಮಹದಾಸೆ. ಆ ದಿನ ಬಹಳ ದೂರವಿಲ್ಲ'' ಎಂದು ಹೇಳಿದ್ದಾರೆ.
ಪಂಚಕುಲಾದಲ್ಲಿರುವ ತೌ ದೇವಿ ಲಾಲ್ ಕ್ರೀಡಾಂಗಣ ಈ ಕ್ರೀಡಾಕೂಟದ ಕೇಂದ್ರವೆನಿಸಿದ್ದು, ಚಂಡೀಗಢ, ಅಂಬಾಲಾ, ಶಹಾಬಾದ್ ಹಾಗೂ ಡೆಲ್ಲಿ ನಗರಗಳು ಸಹ ಕೆಲ ಸ್ಪರ್ಧೆಗಳಿಗೆ ಆತಿಥ್ಯ ವಹಿಸಲಿವೆ. ಕ್ರೀಡಾಕೂಟವನ್ನು ಹರಿಯಾಣ ರಾಜ್ಯ ಸರ್ಕಾರ, ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯ್) ಜಂಟಿಯಾಗಿ ಆಯೋಜಿಸುತ್ತಿವೆ.