* ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಅಂತಿಮ ಪಂದ್ಯದಲ್ಲಿಯೂ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ನೆದರ್ಲೆಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ನಲ್ಲಿ ಅಬ್ಬರಿಸಿದ ಬಳಿಕ ಬೌಲಿಂಗ್ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ್ದು ಭರ್ಜರಿ 160 ರನ್ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಅಜೇಯ ಓಟವನ್ನು ಮುಂದುವರಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 411 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ನೆದರ್ಲೆಂಡ್ಸ್ ತಂಡ ಈ ಪಂದ್ಯದಲ್ಲಿ 250 ರನ್ಗಳನ್ನು ಮಾತ್ರವೇ ಗಳಿಸಲು ಶಕ್ತವಾಯಿತು. ಈ ಮೂಲಕ ನಿರೀಕ್ಷೆಯಂತೆಯೇ ಭಾರೀ ಅಂತರದಿಂದ ಸೋಲು ಅನುಭವಿಸಿದೆ.
* ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಬೌಲಿಂಗ್ನಲ್ಲಿ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್ ಮಾಡಿದ್ದು ಮಾತ್ರವಲ್ಲದೆ ಒಂದು ವಿಕೆಟ್ ಕೂಡ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬರೊಬ್ಬರಿ 9 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ವಿಕೆಟ್ ಕಬಳಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಈ ಪಂದ್ಯದಲ್ಲಿ ಬೌಲಿಂಗ್ ನಡೆಸಿ ವಿಕೆಟ್ ಪಡೆದುಕೊಂಡಿದ್ದಾರೆ.

* ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಪಾಲಿಗೆ 2023 ಅತ್ಯಂತ ಸ್ಮರಣೀಯ ವರ್ಷ. ಎಲ್ಲಾ ಮಾದರಿಯಲ್ಲಿಯೂ ಅದ್ಭುತ ಪ್ರದರ್ಶನ ನಿಡಿರುವ ಗಿಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಈ ವರ್ಷ ಮತ್ತೊಂದು ಪ್ರಮುಖ ಮೈಲಿಗಲ್ಲು ಸಾಧಿಸಿದ್ದಾರೆ. ಈ ವರ್ಷ 2000 ಅಂತಾರಾಷ್ಟ್ರೀಯ ರನ್ಗಳನ್ನು ಸಿಡಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ ಶುಬ್ಮನ್ ಗಿಲ್.
* ಟೀಮ್ ಇಂಡಿಯಾದ ಅಭಿಮಾನಿಗಳು ಈ ಬಾರಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ ಮಾಜಿ ಕೋಚ್ ರವಿ ಶಾಸ್ತ್ರಿ. ವಿಶ್ವಕಪ್ ಟೂರ್ನಿಯಲ್ಲಿ ಕಾಮೆಂಟೇಟರ್ ಆಗಿರುವ ರವಿ ಶಾಸ್ತ್ರಿ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪ್ರದರ್ಶನವನ್ನು ಕೊಂಡಾಡಿದ್ದು ಈ ಟೂರ್ನಿಯಲ್ಲಿ ಭಾರತ ಈಗಾಗಲೇ ಒಂದು ಭಾರಿ ನ್ಯೂಜಿಲೆಂಡ್ ತಂಡವನ್ನು ಈ ಟೂರ್ನಿಯಲ್ಲಿ ಮಣಿಸಿದೆ. ಹೀಗಾಗಿ 2019ರ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದ ಆತಂಕ ಬೇಕಾಗಿಲ್ಲ ಎಂದಿದ್ದಾರೆ ರವಿ ಶಾಸ್ತ್ರಿ.
* ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ತಾವು ಉಳಿದುಕೊಂಡಿರುವ ಹೋಟೆಲ್ನಲ್ಲಿ ದೀಪಾವಳಿ ಹಬ್ಬವನ್ನು ಬರಮಾಡಿಕೊಂಡರು. ಭಾರತ ತಂಡದ ಮುಖ್ಯ ಕೋಚ್ ಹಾಗೂ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಆಟಗಾರರೊಂದಿಗೆ ದೀಪಾವಳಿ ಹಬ್ಬ ಆಚರಿಸಿ ಸಂಭ್ರಮಿಸಿದರು.
* ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಸೇರಿದಂತೆ ಉಳಿದೆಲ್ಲ ಆಟಗಾರರು ಮತ್ತು ತಂಡದ ಸಿಬ್ಬಂದಿಗಳು ಬಣ್ಣಬಣ್ಣದ ಉಡುಗೆ ಧರಿಸುವ ಮೂಲಕ ಮಿಂಚಿದರು. ಇನ್ನು ಕರ್ನಾಟಕದವರೇ ಆದ ವಿಕೆಟ್ ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಕೂಡ ಸದ್ಯ ನಡೆಯುತ್ತಿರುವ 2023ರ ವಿಶ್ವಕಪ್ ನಡುವೆ ತಮ್ಮ ಸಹ ಆಟಗಾರರೊಂದಿಗೆ ತವರಿನಲ್ಲಿ ದೀಪಾವಳಿ ಹಬ್ಬ ಆಚರಿಸಿದರು.
* 1996ರ ವಿಶ್ವಕಪ್ ಚಾಂಪಿಯನ್ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಐತಿಹಾಸಿಕ ಹಿನ್ನಡೆಯಾಗಿದೆ. ಭಾರತದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಶ್ರೀಲಂಕಾ ತಂಡದ ನೀರಸ ಪ್ರದರ್ಶನವು, ಪಾಕಿಸ್ತಾನದಲ್ಲಿ ನಡೆಯಲಿರುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲು ಕಾರಣವಾಗಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪ ಕುರಿತು ಅಸಮಾಧಾನಗೊಂಡಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ಶ್ರೀಲಂಕಾ ತಂಡದ ಸದಸ್ಯತ್ವ ರದ್ದುಗೊಳಿಸಿದ ಬಳಿಕ ಇದೀಗ ಮತ್ತೊಂದು ಅಘಾತ ಎದುರಾಗಿದೆ. ಒಂದು ಕಾಲದಲ್ಲಿ ಉತ್ತುಂಗದಲ್ಲಿ ತೇಲಾಡುತ್ತಿದ್ದ ಶ್ರೀಲಂಕಾ ಕ್ರಿಕೆಟ್, ಇಂದು ಅಧೋಗತಿಗೆ ತಲುಪಿದೆ.