
ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ಕುಮಾರ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರತಿಭಾನ್ವಿತ ನಟನ ಅಗಲಿಕೆ ಕನ್ನಡ ಚಿತ್ರ ಪ್ರೇಮಿಗಳಿಗೆ ಮಾತ್ರವಲ್ಲ ಇಡೀ ದೇಶದ ಸಿನಿ ಪ್ರೇಮಿಗಳಿಗೂ ಆಘಾತ ಮೂಡಿಸಿದೆ. ಭಾರತೀಯ ಕ್ರೀಡಾಲೋಕದ ತಾರೆಯರು ಪುನೀತ್ ರಾಜ್ಕುಮಾರ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ಭಾರತೀಯ ಕ್ರಿಕೆಟ್ನ ದಿಗ್ಗಜ ಆಟಗಾರ ಕನ್ನಡಿಗ ಅನಿಲ್ ಕುಂಬ್ಳೆ ಟ್ವಿಟ್ಟರ್ನಲ್ಲಿ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಪುನೀತ್ ರಾಜ್ಕುಮಾರ್ ಜೊತೆಗೆ ಉತ್ತಮ ಒಡನಾಟವನ್ನು ಹೊಂದಿದ್ದ ಅನಿಲ್ ಕುಂಬ್ಳೆ ರಾಜ್ಕುಮಾರ್ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ಅಗಲಿಕೆ ಆಘಾತವನ್ನುಂಟು ಮಾಡಿದೆ ಎಂದು ಅನಿಲ್ ಕುಂಬ್ಳೆ ಟ್ವೀಟ್ ಮಾಡಿದ್ದಾರೆ.
"ಪುನೀತ್ ರಾಜ್ಕುಮಾರ್ ಅವರ ಅಗಲಿಕೆ ಆಘಾತ ಹಾಗೂ ತೀವ್ರ ದುಃಖವನ್ನುಂಟು ಮಾಡಿದೆ. ಪುನೀತ್ ರಾಜ್ಕುಮಾರ್ ಅವರ ಅಗಲಿಕೆಯೊಂದಿಗೆ ಕನ್ನಡ ಚಿತ್ರರಂಗ ಅಪೂರ್ವ ರತ್ನವೊಂದನ್ನು ಕಳೆದುಕೊಂಡಿದೆ. ನಾನು ಭೆಟಿ ಮಾಡಿದ ಮಾನವೀಯ ವ್ಯಕ್ತಿತ್ವಗಳಲ್ಲಿ ರಾಜ್ಕುಮಾರ್ ಕೂಡ ಒಬ್ಬರು. ತುಂಬಾ ಬೇಗನೆ ಅವರನ್ನು ಕಳೆದುಕೊಂಡಿದ್ದೇವೆ. ಅವರ ಕುಟುಂಬಕ್ಕೆ, ಗೆಳೆಯರಿಗೆ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ನನ್ನ ಸಂತಾಪಗಳು" ಎಂದು ಅನಿಲ್ ಕುಂಬ್ಳೆ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಭಾರತೀಯ ಕ್ರಿಕೆಟ್ನ ಮತ್ತೋರ್ವ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಪುನೀತ್ ರಾಜ್ಕುಮಾರ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. "ಪುನೀತ್ ರಾಜ್ಕುಮಾರ್ ಇನ್ನಿಲ್ಲ ಎಂಬ ಸುದ್ದಿ ಕೇಲಿ ಆಘಾತವಾಗಿದೆ. ವಿನಮ್ರ ವ್ಯಕ್ತಿತ್ವದ ನಟನ ಅಗಲಿಕೆ ಇಡೀ ಭಾರತೀಯ ಚಿತ್ರರಂಗಕ್ಕೆ ಆಘಾತ ನೀಡಿದೆ. ಆವರ ಆತ್ಮಕ್ಕೆ ಸದ್ಗತಿ ದೊರೆಯಲಿ" ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.
ಇನ್ನು ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್, ವಾಸಿಂ ಜಾಫರ್, ಸೇರಿದಂತೆ ಬೆಂಗಳೂರು ಫುಟ್ಬಾಲ್ ಕ್ಲಬ್ ಬಿಎಫ್ಸಿ ಸೇರಿದಂತೆ ಕ್ರೀಡಾಲೋಕದ ಸಾಕಷ್ಟು ಗಣ್ಯರು ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಕಂಬನಿ ಮಿಡಿದಿದೆ.