ಭಾರತ ಹಾಗೂ ಕರ್ನಾಟಕ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟರ್ ಕೆಎಲ್ ರಾಹುಲ್ ಬುಧವಾರ, ಜನವರಿ 17ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಭೇಟಿ ನೀಡಿದರು.
ಕೆಎಲ್ ರಾಹುಲ್ ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಕುಕ್ಕೆ ಸುಬ್ರಮಣ್ಯ, ಸೌಥಡ್ಕ ದೇವಸ್ಥಾನ, ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೆಎಲ್ ರಾಹುಲ್, ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದೇ ವೇಳೆ ಕೆಎಲ್ ರಾಹುಲ್ ಅವರನ್ನು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು. ದೇಗುಲ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಜಯಕುಮಾರ್, ಅರ್ಚಕರಾದ ಸುರೇಶ್ ಭಟ್ ಅವರು ಹಾಜರಿದ್ದರು.
ಉಡುಪಿಗೆ ಭೇಟಿ ನೀಡಿದ ಸಂದರ್ಭದ ಫೋಟೋಗಳನ್ನು ಸ್ವತಃ ಕೆಎಲ್ ರಾಹುಲ್ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮಂಗಳೂರಿನ ಫೇಮಸ್ ಪಬ್ಬಾಸ್ಗೆ ಹೋಗಿ ಗಡ್ಬಡ್ ಕೂಡ ಸವಿದಿದ್ದಾರೆ. 'ನಾನು ಎಂದೆಂದಿಗೂ ಕೃತಜ್ಞರಾಗಿರುವ ಸ್ಥಳ, ನಮ್ಮ ಕುಡ್ಲ' ಎಂದು ಬರೆದುಕೊಂಡಿದ್ದಾರೆ.
ಕೆಎಲ್ ರಾಹುಲ್ ಅವರನ್ನು ಇತ್ತೀಚಿಗೆ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಆಯ್ಕೆ ಮಾಡರಲಿಲ್ಲ. ಆದರೆ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ.

ಇದೇ ಜನವರಿ 25ರಿಂದ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಗೆ ಆರಂಭವಾಗಲಿದ್ದು, ಸರಣಿಯ ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಬಿಸಿಸಿಐ ಈಗಾಗಲೇ ಟೆಸ್ಟ್ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಕೆಎಲ್ ರಾಹುಲ್ ಭಾರತ ತಂಡದ ಭಾಗವಾಗಿದ್ದಾರೆ.
ಕೆಎಲ್ ರಾಹುಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಭಾರತ ಟೆಸ್ಟ್ ತಂಡದ ಭಾಗವಾಗಿದ್ದರು. ಅಲ್ಲಿ ವಿಕೆಟ್ ಕೀಪರ್-ಬ್ಯಾಟರ್ ಪಾತ್ರ ವಹಿಸಿದ ಅವರು ಮೊದಲ ಪಂದ್ಯದಲ್ಲಿ 101 ಮತ್ತು 4 ರನ್ ಗಳಿಸಿದರೆ, ಎರಡನೇ ಪಂದ್ಯದಲ್ಲಿ ಕೆಎಲ್ ರಾಹುಲ್ ಒಂದೇ ಇನ್ನಿಂಗ್ಸ್ನಲ್ಲಿ 8 ರನ್ ಗಳಿಸಿದ್ದರು.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಕೆಎಸ್ ಭರತ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ, ಅವೇಶ್ ಖಾನ್.