ನವದೆಹಲಿ, ಜುಲೈ, 9: ಟೋಕಿಯೋ ಒಲಿಂಪಿಕ್ಸ್ಗೆ ದಿನಗಣನೆ ಆರಂಭವಾಗಿದ್ದು ಎಲ್ಲಾ ಕ್ರೀಡಾಪಟುಗಳು ಭರದ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ಭಾರತದಿಂದಲೂ ಈ ಪ್ರತಿಷ್ಟಿತ ಕ್ರೀಡಾಕೂಟದಲ್ಲಿ ಭಾಗಿಯಾಗಲಿರುವ ಆಟಗಾರರ ಹೆಸರುಗಳು ಬಹುತೇಕ ಅಂತಿಮವಾಗಿದೆ. ಟೂರ್ನಿಯಲ್ಲಿ ಭಾಗವಹಿಸಲು ಕ್ರೀಡಾಪಟುಗಳು ಜಪಾನ್ಗೆ ತೆರಳುವ ಮುನ್ನ ಭಾರತದ ಪ್ರಧಾನಿ ನರೇಂದ್ರ ಮೋದಿ ಆಟಗಾರರೊಂದಿಗೆ ಸಂವಾದವನ್ನು ನಡೆಸಲಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸುವ ಎಲ್ಲಾ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ವೇದಿಕೆಯಲ್ಲಿ ಸಂವಾದವನ್ನು ನಡೆಸಲಿದ್ದಾರೆ. ಜುಲೈ 13ರಂದು ಸಂಜೆ 5 ಗಂಟೆಗೆ ಈ ಸಂವಾದ ನಡೆಯಲಿದೆ. ಈ ಸಂದರ್ಭದಲ್ಲಿ ಅತ್ಯುನ್ನತ ಕ್ರೀಡಾಕೂಟದಲ್ಲಿ ಭಾಗಿಯಾಗುವ ಕ್ರೀಡಾಪಟುಗಳಿಗೆ ಮತ್ತಷ್ಟು ಹುರುಪು ತುಂಬಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ.
ಒಲಿಂಪಿಕ್ಸ್ ಹತ್ತಿರದಲ್ಲಿರುವಾಗಲೇ ಟೋಕಿಯೋದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಭಾರತದ 120ಕ್ಕೂ ಅಧಿಕ ಕ್ರೀಡಾಪಟುಗಳು ಈ ಬಾರಿಯ ಒಲಿಂಪಿಕ್ಸ್ನಲ್ಲಿ ಭಾಗಿಯಾಗಲಿದ್ದಾರೆ. ಆದರೆ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಈ ಬಾರಿಯ ಕ್ರೀಡಾಕೂಟದಲ್ಲಿ ಭಾಗಿಯಾಗುವ ಆಟಗಾರರ ಅಂತಿಮ ಪಟ್ಟಿಯನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.
ಈ ಹಿಂದೆಯೂ ಹಲವು ಸಂದರ್ಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗಿಯಾಗಲಿರುವ ಆಟಗಾರಿಗೆ ಪ್ರೋತ್ಸಾಹ ನೀಡುವಂತಾ ಮಾತುಗಳನ್ನು ಆಡಿದ್ದರು. ಕಳೆದ ತಿಂಗಳಾಂತ್ಯದಲ್ಲಿ ನಡೆಸಿದ 'ಮನ್ ಕೀ ಬಾತ್' ಕಾರ್ಯಕ್ರಮದಲ್ಲಿಯೂ ಪ್ರಧಾನಿ ಈ ಬಗ್ಗೆ ಉಲ್ಲೇಖಿಸಿದ್ದರು. ಜೊತೆಗೆ ದೇಶದ ಪ್ರತಿಯೊಬ್ಬರು ಕೂಡ ಈ ಪ್ರತಿಷ್ಟಿತ ಕ್ರೀಡಾಕೂಟದಲ್ಲಿ ಭಾಗಿಯಾಗುವ ಭಾರತದ ಕ್ರೀಡಾಪಟುಗಳಿಗೆ ಪ್ರೋತ್ಸಾಹವನ್ನು ನೀಡಬೇಕು ಎಂದು ಮನವಿಯನ್ನು ಮಾಡಿದ್ದರು.
ಟೋಕಿಯೋದಲ್ಲಿ ಜುಲೈ 23ರಿಂದ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭವಾಗಲಿದ್ದು ಆಗಸ್ಟ್ 8ರಂದು ತೆರೆ ಕಾಣಲಿದೆ. ಕೊರೊನಾವೈರಸ್ನ ಕಾರಣದಿಂದಾಗಿ ಟೋಕಿಯೋ ನಗರದಲ್ಲಿ ಜಪಾನ್ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದೆ. ಹೀಗಾಗಿ ಯಾವುದೇ ಪ್ರೇಕ್ಷಕರಿಲ್ಲದೆ ಈ ಬಾರಿಯ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ.