ಕೇಂದ್ರ ಕ್ರೀಡಾ ಸಚಿವಾಲಯವು ಹೊಸದಾಗಿ ಚುನಾಯಿತವಾದ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (WFI) ಸಂಸ್ಥೆಯನ್ನು ಅದರ ಮಾಜಿ ಪದಾಧಿಕಾರಿಗಳ ಪ್ರಭಾವಕ್ಕೆ ಒಳಪಟ್ಟಿದೆ ಎಂದು ಆರೋಪಿಸಿ ಅಮಾನತುಗೊಳಿಸಿದೆ.
ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಇದೀಗ ಭಾರತೀಯ ಕುಸ್ತಿ ಒಕ್ಕೂಟದ (WFI) ವಿವಾದ ದಿನದಿಂದ ದಿನಕ್ಕೆ ಒಂದೊಂದು ಸ್ವರೂಪ ತಾಳುತ್ತಿದೆ.

ಸದ್ಯ ನಡೆಯುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ತನ್ನ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಂಗಳವಾರ, ಡಿಸೆಂಬರ್ 26ರಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಬಹಿರಂಗ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿನೇಶ್ ಫೋಗಟ್, ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದಾಗಲೂ ಮಹಿಳಾ ಕುಸ್ತಿಪಟುಗಳಿಗೆ ನೀಡಿದ ಕಿರುಕುಳದ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು.
ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷರ ವಿರುದ್ಧ ದೇಶದ ಅಗ್ರ ಕುಸ್ತಿಪಟುಗಳು ಪ್ರತಿಭಟಿಸಿದಾಗಲೂ ದಬ್ಬಾಳಿಕೆ ಮನೋಭಾವದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳನ್ನು ಅಪಹಾಸ್ಯ ಮಾಡುವ ಮೂಲಕ ಹೇಗೆ ವರ್ತಿಸಿದ್ದಾರೆ ಎಂಬುದನ್ನು ವಿನೇಶ್ ಫೋಗಟ್ ಎತ್ತಿ ತೋರಿಸಿದರು.
ಹೊಸದಾಗಿ ಚುನಾಯಿತವಾದ ಭಾರತೀಯ ಕುಸ್ತಿ ಒಕ್ಕೂಟ ಸಂಸ್ಥೆಯ ವಿರುದ್ಧದ ಪ್ರತಿಭಟನೆ ವೇಳೆ ಸಾಕ್ಷಿ ಮಲಿಕ್ ಕುಸ್ತಿ ಕ್ರೀಡೆಯಿಂದ ನಿವೃತ್ತರಾದರು. ನಂತರ ಭಜರಂಗ್ ಪುನಿಯಾ ಅವರು ತಮ್ಮ ನಿಲುವಿನ ಸಂಕೇತವಾಗಿ ನವದೆಹಲಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಿರುವುದನ್ನು ವಿನೇಶ್ ಫೋಗಟ್ ಗಮನಸೆಳೆದರು.
ಕ್ರೀಡಾ ಸಚಿವಾಲಯವು ಹೊಸದಾಗಿ ಚುನಾಯಿತವಾದ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯನ್ನು ಅದರ ಮಾಜಿ ಪದಾಧಿಕಾರಿಗಳ ಪ್ರಭಾವಕ್ಕೆ ಒಳಪಟ್ಟಿದೆ ಎಂದು ಆರೋಪಿಸಿ ಅಮಾನತುಗೊಳಿಸಿದ ಕೆಲವೇ ದಿನಗಳ ನಂತರ, ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿವಾಸದಲ್ಲಿ ಭಾರತೀಯ ಕುಸ್ತಿ ಒಕ್ಕೂಟದ ಕಚೇರಿಯೂ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ಬಲವಾದ ಪದಗಳ ಮೂಲಕ ತಿಳಿಸಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಪತ್ರ ಬರೆದು, ಡಬ್ಲ್ಯುಎಫ್ಐನ ದೈನಂದಿನ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ಮಾಡಲು ಅಡ್-ಹಾಕ್ ಪ್ಯಾನೆಲ್ ಅನ್ನು ರಚಿಸುವಂತೆ ಆಡಳಿತ ಮಂಡಳಿಗೆ ಸೂಚಿಸಿದರು.
ಗಮನಾರ್ಹವಾಗಿ, ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ಅವರು ಡಬ್ಲ್ಯುಎಫ್ಐ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆದ್ದ ಕೆಲವೇ ಗಂಟೆಗಳ ನಂತರ, ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಭಜರಂಗ್ ಪುನಿಯಾ ಅವರೊಂದಿಗೆ ವಿನೇಶ್ ಫೋಗಟ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಈ ಹಿಂದೆ ಕಿರುಕುಳ, ದಬ್ಬಾಳಿಕೆ ನಡೆಸಿದವರ ಕೈಗೆ ಮತ್ತೆ ಅಧಿಕಾರ ಸಿಕ್ಕಿದೆ ಎಂದು ಭಾರತೀಯ ಕುಸ್ತಿಪಟುಗಳು ಬೇಸರ ವ್ಯಕ್ತಪಡಿಸಿದರು. ವಿನೇಶ್ ಫೋಗಟ್ ಅವರ ಒಲಿಂಪಿಕ್ ಪದಕದ ಕನಸು ಮರೆಯಾಗುತ್ತಿದೆ ಮತ್ತು ಸರ್ಕಾರದ ಬೆಂಬಲದ ಕೊರತೆಯಿದೆ ಎಂದು ಆರೋಪಿಸಿದರು.