ಬೆಂಗಳೂರು, ಜು.30: ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನ್ನಿಸ್ ಮೈದಾನ ನಿರ್ಮಾಣ ಹಾಗೂ ಟೆನ್ನಿಸ್ ಕ್ರೀಡೆ ಸಂಬಂಧ ಇತರೆ ವಿಚಾರಗಳ ಬಗ್ಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು
ಟೆನ್ನಿಸ್ ಅಸೋಸಿಯೇಷನ್ ನಿಯೋಗವು ಸೋಮವಾರದಂದು ಭೇಟಿ ಮಾಡಿ ಚರ್ಚಿಸಿದೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಡಾ.ಜಿ. ಪರಮೇಶ್ವರ್, ಟೆನ್ನಿಸ್ ಅಸೋಸಿಯೇಷನ್ ನಿಯೋಗವು ಭೇಟಿ ಮಾಡಿ ಹಲವು ವಿಚಾರ ಚರ್ಚಿಸಿದ್ದಾರೆ. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನ್ನಿಸ್ ಮೈದಾನ ನಿರ್ಮಾಣದ ಬಗ್ಗೆ ಮನವಿ ಮಾಡಿ, ಕೆಲ ಸಲಹೆ ನೀಡಿದ್ದಾರೆ.
ರೋಜರ್ ಫೆಡರರ್ ವಿಂಬಲ್ಡನ್ ಸಾಧನೆಗಳತ್ತ ಒಂದು ಸುತ್ತು..
ಕಬ್ಬನ್ಪಾರ್ಕ್ನಲ್ಲಿರುವ ಟೆನ್ನಿಸ್ ಕೋರ್ಟ್ ಇದ್ದರೂ, ಕೆಲ ಷರತ್ತುಗಳಿರುವುದರಿಂದ ಎಲ್ಲರಿಗೂ ಈ ಕೋರ್ಟ್ ಬಳಕೆಯಾಗುತ್ತಿಲ್ಲ. ಇದನ್ನು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಷ ನೀಡಿ ಎಂದು ಕೇಳಿದ್ದಾರೆ. ನಮ್ಮ ಸರಕಾರ ಎಲ್ಲ ಬಗೆಯ ಕ್ರೀಡೆಗಳಿಗೂ ಉತ್ತೇಜನ ನೀಡುತ್ತಾ ಬಂದಿದೆ. ಕ್ರೀಡೆಗೆ ಸಂಬಂಧಿಸಿದ ಎಲ್ಲ ರೀತಿಯ ಸವಲತ್ತೂ ನೀಡಲಾಗುತ್ತಿದೆ.ಬೆಂಗಳೂರು ಕ್ರೀಡಾ ರಾಜಧಾನಿಯಾಗಬೇಕು ಎಂಬುದೇ ನಮ್ಮ ಸರಕಾರದ ಬಯಕೆ. ಈ ನಿಟ್ಟಿನಲ್ಲಿ ಬಜೆಟ್ನಲ್ಲಿ ಕ್ರೀಡೆಗೆ ಸಾಕಷ್ಟು ಅನುದಾನ ನೀಡಿದ್ದೇವೆ.
ನಗರದ ಹೊರವಲಯದಲ್ಲಿ ಸ್ಪೋರ್ಟ್ಸ್ ವಿಲೇಜ್ ನಿರ್ಮಾಣ, ಕ್ರೀಡಾ ವಿಶ್ವವಿದ್ಯಾಲಯ, ಕ್ರೀಡಾ ಸಂಬಂಧಿತ ಸಲಕರಣೆ ಉತ್ಪಾದನೆಗೆ ಅವಕಾಶ ಸೇರಿದಂತೆ ಹಲವು ಯೋಜನೆಗಳನ್ನು ಸಿದ್ಧಪಡಿಸಿದ್ದೇವೆ. ಒಟ್ಟಾರೆ ಕ್ರೀಡೆಗೆ ನಮ್ಮ ಬೆಂಬಲವಿರಲಿದೆ ಎಂದು ಹೇಳಿದರು. ಈ ವೇಳೆ ಸಮಾಜ ಕಲ್ಯಾಣ ಸಚಿವ ಹಾಗೂ ಅಸೋಸಿಯೇಷನ್ ಸದಸ್ಯ ಪ್ರಿಯಾಂಕ ಖರ್ಗೆ, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಪಾಲ್ಗೊಂಡಿದ್ದರು.